ಮಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ 15ಕ್ಕೂ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ವ್ಯವಸ್ಥಿತವಾಗಿ ಚುನಾವಣಾ ತಯಾರಿ ಮತ್ತು ಪರಿಣಾಮಕಾರಿಯಾಗಿ ಮತದಾರರ ಭೇಟಿ ಮೂಲಕ ಅಭೂತಪೂರ್ವ ಗೆಲುವು ಸಾಧಿಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಕುಮಾರ್ ಸುರಾನ ಹೇಳಿದರು.
ದ.ಕ. ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು. ಜಿಲ್ಲಾ ಮಟ್ಟದಲ್ಲಿ ಚುನಾವಣಾ ಸಮಿತಿಯನ್ನು ಅವರು ಘೋಷಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ನೇತೃತ್ವದಲ್ಲಿ ಸಂಜೀವ ಮಠಂದೂರು, ದೇವದಾಸ್ ಶೆಟ್ಟಿ, ಕುಶಾಲಪ್ಪ ಗೌಡ ಸೇರಿದಂತೆ ಜಿಲ್ಲೆಯ ಮಾಜಿ ಶಾಸಕರು ಮತ್ತು ಪ್ರಮುಖರ ಸಮಿತಿಯನ್ನು ಪ್ರಕಟಿಸಿದರು.ನಂತರ ವಿಧಾನ ಪರಿಷತ್ ಸದಸ್ಯ ಹಾಗೂ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿ, ಗ್ರಾ.ಪಂ. ಸದಸ್ಯರಿಗೆ ಗೌರವಧನ ನೀಡಿಕೆ, ಸೇರಿದಂತೆ ಅಧಿಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಬಿಜೆಪಿ ಶ್ಲಾಘನೀಯ ಸಾಧನೆಗೈದಿದೆ. ಮುಂದಿನ ಚುನಾವಣೆಯಲ್ಲಿ ವ್ಯವಸ್ಥಿತ ಮತ್ತು ಸಂಘಟಿತ ಪ್ರಯತ್ನದಿಂದ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪ್ ಸಿಂಹ ನಾಯಕ್ , ಜಿಲ್ಲಾ ಪ್ರಭಾರಿ ಲಾಲಾಜಿ ಮೆಂಡನ್, ರಾಜ್ಯ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ. ಭಟ್ ಉಪಸ್ಥಿತರಿದ್ದರು.