ಮಂಗಳೂರು: ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ಇನ್ಸ್ ಪೆಕ್ಟರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಪೊಲೀಸರು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ರನ್ನು ರಜೆ ಮೇಲೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರೂ ಕೂಡ, . ಪೊಲೀಸ್ ಠಾಣೆಯ ೫೦ಕ್ಕೂ ಹೆಚ್ಚು ಸಿಬ್ಬಂದಿಗಳು ಇನ್ಸ್ ಪೆಕ್ಟರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ತಮ್ಮ ಕಾರ್ಯ ಸ್ಥಗಿತಗೊಳಿಸಿ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಅಲ್ಲದೆ, ವರ್ಗಾವಣೆಯಾಗಿರುವ ಇನ್ಸ್ ಪೆಕ್ಟರ್ ವಾಪಾಸ್ ಬರುವವರೆಗೆ ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ವರ್ಗಾವಣೆಗೆ ಕಾರಣ:ಸಿಬ್ಬಂದಿಗಳ ಆರೋಪ
೨೦೧೪ರ ಡಿಸೆಂಬರ್ ನಲ್ಲಿ ಮಂಗಳೂರಿನ ಉಳಾಯಿಬೆಟ್ಟುವಿನಲ್ಲಿ ನಡೆದ ಗಲಭೆ ವೇಳೆ ಅಬೂಬಕ್ಕರ್ ಸಿದ್ದಿಕ್ ಎಂಬಾತ ಮಹಿಳೆ ವೇಳೆ ಅತ್ಯಾಚಾರಕ್ಕೆ ಯತ್ನಿಸಿ ಪರಾರಿಯಾಗಿದ್ದ. ಅಲ್ಲದೆ, ಆತನ ವಿರುದ್ಧ ಕೊಲೆ ಯತ್ನ ಪ್ರಕರಣವೂ ದಾಖಲಾಗಿತ್ತು. ಈ ಆರೋಪಿಯನ್ನು ನಿನ್ನೆ ಬಂಧಿಸಿದ್ದ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಮಂಗಳವಾರ ಕೋರ್ಟ್ ಗೆ ಹಾಜರುಪಡಿಸಿ ೧೪ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆರೋಪಿಯನ್ನು ಒಪ್ಪಿಸಿದ್ದರು.
ಆರೋಪಿಯನ್ನು ಬಂಧಿಸಿದ ಹಿನ್ನೆಲೆಯಲ್ಲಿ ಇಬ್ಬರು ರಾಜಕೀಯ ನಾಯಕರು ಮಂಗಳೂರು ಪೊಲೀಸ್ ಆಯುಕ್ತ ಮುರುಗನ್ ಅವರಿಗೆ ಕರೆ ಮಾಡಿ ಇನ್ಸ್ ಪೆಕ್ಟರ್ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಡ ಹಾಕಿರುವುದಾಗಿಯೂ, ಈ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ರನ್ನು ವರ್ಗಾವಣೆ ಮಾಡಲಾಗಿದೆ ಎಂದು ಪೊಲೀಸ್ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದು, ಪೊಲೀಸ್ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡಿದ್ದಾರೆ. ಇನ್ಸ್ ಪೆಕ್ಟರ್ ವಾಪಾಸ್ ಕೆಲಸಕ್ಕೆ ಹಾಜರಾಗದಿದ್ದರೆ ಪ್ರತಿಭಟನೆ ಮುಂದುವರಿಸುವ ಎಚ್ಚರಿಕೆ ನೀಡಿದ್ದಾರೆ.