ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧಾರ್ಮಿಕ ಕೇಂದ್ರ, ಪ್ರಮುಖ ಸ್ಥಳಗಳು, ಶಿಕ್ಷಣ ಕೇಂದ್ರ ಮುಂತಾದೆಡೆ ಶೀಘ್ರ ಸಿಸಿಟಿವಿ ಅಳವಡಿಕೆ ಕಾರ್ಯ ಪೂರ್ಣಗೊಳಿಸಬೇಕು. ಸಿಸಿಟಿವಿಯ ಗುಣಮಟ್ಟ ಮತ್ತು ಸಂಗ್ರಹಣಾ ಸಾಮರ್ಥ್ಯದ ಮೇಲೆ ನಿಗಾ ವಹಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ಎ. ಬಿ. ಇಬ್ರಾಹಿಂ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ದ.ಕ.ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಿಸಿಟಿವಿ ಅಳವಡಿಕೆ ಸಂಬಂಧಿಸಿದಂತೆ ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿದ್ದರು.ಮುಂದಿನ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಮುನ್ನ ಜಿಲ್ಲೆಯ ಎಲ್ಲ ಧಾರ್ಮಿಕ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಕಾರ್ಯ ಪೂರ್ಣಗೊಳ್ಳಬೇಕು.
ಅಲ್ಲದೇ ಈ ಸಂಬಂಧ ಎಲ್ಲ ಧಾರ್ಮಿಕ ಕೇಂದ್ರಗಳು ಮುಂದಿನ 15 ದಿನಗಳೊಳಗೆ ವರದಿ ನೀಡುವಂತೆ ನಿರ್ದೇಶ ನೀಡಬೇಕೆಂದು ಅಪರ ಜಿಲ್ಲಾಧಿಕಾರಿಯವರಿಗೆ ಅವರು ಸೂಚಿಸಿದರು.ಇದೇ ಸಂದರ್ಭ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ | ಎಸ್. ಡಿ. ಶರಣಪ್ಪ ಮಾತನಾಡಿ, ಪೆಟ್ರೋಲ್ ಬಂಕ್, ಮತ್ತಿತರ ಪ್ರಮುಖ ಸ್ಥಳಗಳಲ್ಲಿ ರಸ್ತೆಗಳಲ್ಲಿಯೂ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಲು ಸೂಚನೆ ನೀಡಬೇಕು ಎಂದರು.ಈ ವೇಳೆ ಅಪರ ಜಿಲ್ಲಾಧಿಕಾರಿ ಎಸ್. ಕುಮಾರ್, ಡಿಸಿಪಿ ಶಾಂತರಾಜು, ಮಹಾನಗರ ಪಾಲಿಕೆ ಆಯುಕ್ತ ಡಾ | ಎಚ್. ಎನ್. ಗೋಪಾಲಕೃಷ್ಣ ಉಪಸ್ಥಿತರಿದ್ದರು.