ಮಂಗಳೂರು: ನಾನು ಸರಕಾರದ ಸಚಿವ. ಮುಖ್ಯಮಂತ್ರಿಗಳು ನೀಡುವ ಆದೇಶವನ್ನು ಪಾಲಿಸುವುದು ಸಚಿವರ ಕರ್ತವ್ಯ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಮಾಡಿರುವ ಆದೇಶವನ್ನು ಪಾಲಿಸುತ್ತೇನೆ ಎಂದು ರಾಜ್ಯ ಗೃಹ ಸಚಿವ ಡಾ | ಜಿ. ಪರಮೇಶ್ವರ್ ಅವರು ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ ಚಿಕ್ಕಮಗಳೂರು ಉಸ್ತುವಾರಿ ಸಚಿವರನ್ನಾಗಿ ನಿಯುಕ್ತಿಗೊಳಿಸಿರುವುದಕ್ಕೆ ಅಸಮಾಧಾನವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಪಿಸಿಸಿ ಕಾರ್ಯದರ್ಶಿಯಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷದ ಉಸ್ತುವಾರಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವನಾಗಿ ನನಗೆ ವಹಿಸಿರುವ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ ಎಂದರು.ಮುಂಬರುವ ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಯಾರ ಜತೆಯೂ ಮೈತ್ರಿ ಅಥವಾ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಾ | ಪರಮೇಶ್ವರ್ ಸ್ವಷ್ಟಪಡಿಸಿದರು.
ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಪಕ್ಷದಲ್ಲಿ ಕಳೆದ 1 ತಿಂಗಳ ಹಿಂದೆಯೇ ತಯಾರಿ ಆರಂಭಗೊಂಡಿದೆ. ಅಭ್ಯರ್ಥಿಗಳ ಆಯ್ಕೆ ಅಧಿಕಾರವನ್ನು ಜಿಲ್ಲಾ ಘಟಕಗಳಿಗೆ ನೀಡಲಾಗಿದೆ. ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ದಿಷ್ಟ ಮಾನದಂಡಗಳನ್ನು ಸೂಚಿಸಲಾಗಿದೆ ಎಂದರು.