ಮಂಗಳೂರು: ಐದು ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಹನಿ ಹಾಕಿಸುವುದು ಅತಿ ಅವಶ್ಯ. ಹೆತ್ತವರು ಈ ನಿಟ್ಟಿನಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆದಿತ್ಯವಾರ ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹಮ್ಮಿಕೊಂಡ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿಶ್ವ ಆರೋಗ್ಯ ಸಂಸ್ಥೆ 2014 ಮಾರ್ಚ್ 27ರಂದು ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿ ಘೋಷಿಸಿದೆ. ಆದರೂ ನಾವು ಈ ಬಗ್ಗೆ ಮುಂಜಾಗ್ರತೆ ಕ್ರಮ ವಹಿಸುವುದು ಅಗತ್ಯ. ಸರಕಾರ ಎಲ್ಲ ರೀತಿಯಲ್ಲೂ ಜಾಗೃತಿ ಮೂಡಿಸಿದೆ. ಮಕ್ಕಳ ಭವಿಷ್ಯಕ್ಕಾಗಿ ಪ್ರತಿಯೊಬ್ಬರೂ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು.ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲು, ಮೇಯರ್ ಜೆಸಿಂತಾ ವಿಜಯ್ ಆಲ್ಪ್ರೇಡ್, ದ.ಕ.ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ, ಜಿಲ್ಲಾ ಪಂಚಾಯತ್ ಸಿಇಒ ಶ್ರೀವಿದ್ಯಾ, ಮನಪಾ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಕಾಶ್ ಬಿ. ಸಾಲ್ಯಾನ್, ಡಿಎಂಒ ಡಾ| ರಾಜೇಶ್ವರಿ ದೇವಿ, ಲೇಡಿಗೋಶನ್ ಆಸ್ಪತ್ರೆಯ ಅಧೀಕ್ಷಕಿ ಡಾ| ಸವಿತಾ, ಸಿಕಂದರ್ ಪಾಷಾ ಉಪಸ್ಥಿತರಿದ್ದರು.