ಮಂಗಳೂರು: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿ ಜನಾಭಿಪ್ರಾಯ ಸಲ್ಲಿಸಲು ರಾಜ್ಯ ಸರಕಾರ ವಿಳಂಬ ಮಾಡುವುದರಿಂದ ಜನರಿಗೆ ಸಮಸ್ಯೆಯಾಗಲಿದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಸಂಸದರು, ಪ್ರಸ್ತುತ ಕೇಂದ್ರ ಸರಕಾರ ಈ ಬಗ್ಗೆ ಅಂತಿಮ ಪ್ರಕಟನೆಯನ್ನು ಇನ್ನೂ ಹೊರಡಿಸದಿರುವ ಬಗ್ಗೆ ಚಕಾರವೆತ್ತುತ್ತಿಲ್ಲ ಎಂದು ದಕ್ಷಿಣ ಕನ್ನಧಿಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಕಸ್ತೂರಿರಂಗನ್ ವರದಿಗೆ ಸಂಬಂಧಿಸಿ ರಾಜ್ಯ ಸರಕಾರ ಜನಾಭಿಪ್ರಾಯ ಸಂಗ್ರಹಿಸಿ ಶಿಫಾರಸಿನೊಂದಿಗೆ ಈಗಾಗಲೇ ಕೇಂದ್ರ ಸರಕಾರಕ್ಕೆ ಸಲ್ಲಿಸಿದೆ. ಆದರೆ ಅಂತಿಮ ಪ್ರಕಟನೆ ಹೊರಡಿಸಬೇಕಾದ ಬಗ್ಗೆ ಕೇಂದ್ರ ಸರಕಾರ ಇನ್ನೂ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ರಾಜ್ಯ ಸರಕಾರದ ವಿರುದ್ಧ ಅಂದು ಅಪಪ್ರಚಾರ ನಡೆಸಿದ್ದ ಬಿಜೆಪಿಯ ಉಡುಪಿ ಸಂಸದರು ಯಾವುದೇ ಹೇಳಿಕೆ ನೀಡದೇ ಮೌನ ವಹಿಸಿದ್ದಾರೆ ಎಂದು ಅವರು ಆಪಾದಿಸಿದರು.ಮಾತ್ರವಲ್ಲದೆ, ಶೀಘ್ರವೇ ಕಸ್ತೂರಿರಂಗನ್ ವರದಿ ಬಗ್ಗೆ ಅಂತಿಮ ಪ್ರಕಟಣೆ ಹೊರಡಿಸುವ ಬಗ್ಗೆ ಕೇಂದ್ರ ಸರಕಾರಕ್ಕೆ ಒತ್ತಡ ಹಾಕಬೇಕೆಂದು ಅವರು ಆಗ್ರಹಿಸಿದರು.