ಮಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಈಗಾಗಲೇ ನೇಮಕವಾಗಿರುವ ಸೆಕ್ಟರ್ ಅಧಿಕಾರಿಗಳು ಶೀಘ್ರ ಕಾರ್ಯೋನ್ಮುಖರಾಗಬೇಕು. ಚುನಾವಣೆಗೆ ಸಂಬಂಧಿಸಿ ಯಾವುದೇ ಸಮಸ್ಯೆಗಳಾಗದಂತೆ ಕ್ರಮ ವಹಿಸಬೇಕು ಎಂದು ದ.ಕ. ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎ. ಬಿ. ಇಬ್ರಾಹಿಂ ಸೂಚಿಸಿದ್ದಾರೆ.
ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಚುನಾವಣಾ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮರು ಮತದಾನ, ಮತಗಟ್ಟೆ ಬದಲಾಗುವುದು ಮುಂತಾದ ದೂರುಗಳು ಈ ಬಾರಿಯ ಚುನಾವಣೆಯಲ್ಲಿ ಕೇಳಿ ಬರಬಾರದು.
ಇಡೀ ಚುನಾವಣೆ ಪ್ರಕ್ರಿಯೆ ಸುಸೂತ್ರವಾಗಿ ನಡೆಯುವಲ್ಲಿ ಸೆಕ್ಟರ್ ಅಧಿಕಾರಿಗಳು ಮತ್ತು ಇತರ ಚುನಾವಣಾ ಸಂಬಂಧ ಅಧಿಕಾರಿಗಳು ಕೈ ಜೋಡಿಸಬೇಕು ಎಂದು ಅವರು ನಿರ್ದೇಶ ನೀಡಿದರು.
ಎಲ್ಲ ಮತಗಟ್ಟೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕೆಲವೆಡೆ ಮತದಾರರು ಮತದಾನ ಬಹಿಷ್ಕಾರ ಮಾಡುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಅಂಥವರ ಮನವೊಲಿಸುವ ಪ್ರಯತ್ನವನ್ನು ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ಇದೇ ವೇಳೆ ತಿಳಿಸಿದರು.ನಂತರ ಅಪರ ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 136 ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಲ್ಲಲ್ಲಿ ಅಳವಡಿಸಲಾಗಿರುವ ಪೋಸ್ಟರ್, ಬ್ಯಾನರ್ಗಳನ್ನು ಪರಿಶೀಲಿಸಿ ಅನಧಿಕೃತ ವಾಗಿ ಅಳವಡಿಸಿರುವುದು ಕಂಡು ಬಂದಲ್ಲಿ ಮಾಹಿತಿ ನೀಡಬೇಕು.
ಚುನಾವಣಾ ಪ್ರಚಾರದ ವಾಹನಗಳ ಮೇಲೆಯೂ ನಿಗಾ ಇಡಬೇಕು. ಅಲ್ಲದೇ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶ ಮತ್ತು ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಚುನಾವಣೆ ವೇಳೆ ವೀಡಿಯೋ ದಾಖಲೀಕರಣ ವ್ಯವಸ್ಥೆ ಮಾಡಬೇಕು ಎಂದರು.