ಮಂಗಳೂರು: ಕಾರೊಂದು ಎರಡು ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ನಡೆದು ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ಬಬ್ಬುಕಟ್ಟೆಯಲ್ಲಿ ಸಂಭವಿಸಿದೆ. ಸ್ಕೂಟರ್ ಸವಾರ ಕಾಪಿಕಾಡ್ ನಿವಾಸಿ ರಾಬಿನ್ (25)ಗಂಭೀರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇರಳಕಟ್ಟೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಎದುರಿನಿಂದ ಬರುತಿದ್ದ ಸ್ಕೂಟರಿಗೆ ಢಿಕ್ಕಿ ಹೊಡೆದು ಅನಂತರ ಬದಿಯಲ್ಲಿ ಬರುತ್ತಿದ್ದ ಇನ್ನೊಂದು ಸ್ಕೂಟರಿಗೆಢಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಸ್ಕೂಟರ್ ಸವಾರ ರಾಬಿನ್ ಅವರ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದು ತತ್ಕ್ಷಣವೇ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಗೆ ಕಾರು ಚಾಲಕನ ಅತೀ ವೇಗದ ಚಾಲನೆಯೇ ಕಾರಣ ಎನ್ನಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.