ಮಂಗಳೂರು: ಹಿಂದುಳಿದ ವರ್ಗಗಳ ಹರಿಕಾರರಾಗಿರುವ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯಕ್ಕೆ ನೀಡಿದ ಕೊಡುಗೆಗಳಿಂದಾಗಿ ಜನತೆ ಅವರನ್ನು ಸದಾ ನೆನಪಿಸುತ್ತಿದ್ದಾರೆ ಎಂದು ದ.ಕ.ಜಿಲ್ಲಾಧಿಕಾರಿ ಇಬ್ರಾಹಿಂ ಹೇಳಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಂಗಳೂರಿನ ರಾಜ್ಯ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಏರ್ಪಡಿಸಿರುವ ದೇವರಾಜ ಅರಸು ಅವರ ಛಾಯಾಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉಳುವವನೇ ಹೊಲದೊಡೆಯ ಎಂಬ ಕಾನೂನು ಮೂಲಕ ಅನೇಕ ಮಂದಿಗೆ ಭೂಮಿಯ ಮಾಲಕತ್ವ ಒದಗಿಸಿದ ಕೀರ್ತಿ ಅರಸು ಅವರದ್ದಾಗಿದೆ. ಅರಸು ಅವರ ಕೊಡುಗೆಗಳ ಅರಿವು ಇಂದಿನ ಪೀಳಿಗೆಗೆ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ವಾರ್ತಾ ಇಲಾಖೆಯು ಆಯೋಜಿಸಿರುವ ಅರಸು ಅವರ ಛಾಯಾಚಿತ್ರಗಳ ಪ್ರದರ್ಶನ ಶ್ಲಾಘನೀಯವಾಗಿದೆ ಎಂದರು.ಈ ಸಂದರ್ಭ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ನಾಯಕ್ , ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಮೊದಲಾದವರು ಉಪಸ್ಥಿತರಿದ್ದರು.