ಮಂಗಳೂರು: ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸರಳಿಕಟ್ಟೆಯಲ್ಲಿ ನಡೆದಿದೆ. ಮಂಗಳೂರಿನ ಜಯಕಿರಣ ಪತ್ರಿಕೆ ವರದಿಗಾರ ಆಸಿಫ್ ಘಟನೆಯಲ್ಲಿ ಹಲ್ಲೆಗೊಳಗಾದ ಪತ್ರಕರ್ತ. ಈತ ತನ್ನ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸರಳಿಕಟ್ಟೆ ಸಮೀಪ ಕಾರಿನಲ್ಲಿ ಬಂದ ೬ ಜನರ ತಂಡ ಹಲ್ಲೆ ನಡೆಸಿ ಬೆದರಿಕೆಯೊಡ್ಡಿ ಪರಾರಿಯಾಗಿದೆ ಎನ್ನಲಾಗಿದೆ.
ಹಲ್ಲೆಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಖಂಡನೆ
ಜಯಕಿರಣ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಆಸೀಫ್ ಸರಳೀಕಟ್ಟೆ ಅವರಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿರುವುದನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಖಂಡಿಸಿದೆ.
ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ನಿರಂತರವಾಗಿ ಹಲ್ಲೆ ನಡೆಸುತ್ತಿರುವ ಮತ್ತು ಅವರ ಕರ್ತವ್ಯಕ್ಕೆ ಧಕ್ಕೆ ತರುವಂತಹ ಕೆಲಸಗಳು ನಡೆಯುತ್ತಿದ್ದು, ಪತ್ರಿಕಾ ಸ್ವಾತಂತ್ರ್ಯದ ಮೇಲೆ ದಾಳಿ ನಡೆಸಲಾಗುತ್ತಿದೆ.
ಇದನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸುತ್ತದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ತೆಗೆದುಕೊಳ್ಳಬೇಕು. ಮಾಧ್ಯಮದವರು ಭಯ ಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡುವಂತೆ ಪೊಲೀಸ್ ವರಿಷ್ಠಾಧಿಕಾರಿಯವರಲ್ಲಿ ಒತ್ತಾಯಿಸಲಾಗುವುದು ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ತಿಳಿಸಿದ್ದಾರೆ.