ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ಯೋಗಾವಕಾಶಗಳ ಸೃಷ್ಟಿಯ ನಿಟ್ಟಿನಲ್ಲಿ ಕೆಲವು ಯೋಜನೆಗಳು ಪ್ರಸ್ತಾವನೆಯಲ್ಲಿದ್ದು ಇದರಲ್ಲಿ ಪ್ರಮುಖವಾಗಿ ಪ್ಲಾಸ್ಟಿಕ್ ಪಾರ್ಕ್ ಯೋಜನೆ ಮುಂದಿನ ವರ್ಷ ಅನುಷ್ಠಾನಗೊಳ್ಳುವ ನಿರೀಕ್ಷೆ ಇದೆ ಎಂದು ಸಂಸದ ನಳಿನ್ ಕುಮಾರ್ ಹೇಳಿದರು.
ಕೇಂದ್ರ ಸರಕಾರದ ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆಯಡಿ ನಗರದ ಸಹ್ಯಾದ್ರಿ ಎಂಜಿನಿಯರಿಂಗ್ ಹಾಗೂ ಮ್ಯಾನೇಜ್ಮೆಂಟ್ ವಿದ್ಯಾಸಂಸ್ಥೆ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಉದ್ಯೋಗ ಮತ್ತು ಕೌಶಲ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಅವರು ವಹಿಸಿ ಮಾತನಾಡಿದರು. ಸುಮಾರು 1,000 ಎಕ್ರೆ ಪ್ರದೇಶದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಯಾಗಲಿದೆ. ಇದಲ್ಲದೆ ಎಂಆರ್ಪಿಎಲ್ 4ನೇ ಹಂತ ಯೋಜನೆ ಬರಲಿದೆ. ಐಟಿ ಪಾರ್ಕ್ ವಿಸ್ತರಣೆಯಾಗಲಿದೆ. ಈ ಎಲ್ಲ ಯೋಜನೆಗಳು ಕಾರ್ಯಾರಂಭವಾದಾಗ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದವರು ವಿವರಿಸಿದರು.
ಮುಖ್ಯ ಅತಿಥಿಯಾಗಿದ್ದ ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಕ್ಯಾ| ಗಣೇಶ್ ಕಾರ್ಣಿಕ್ , ಉಪಮೇಯರ್ ಪುರುಷೋತ್ತಮ ಚಿತ್ರಾಪುರ ಭಾಗವಹಿಸಿದ್ದರು. ಭಂಡಾರಿ ಫೌಂಡೇಶನಿನ ಅಧ್ಯಕ್ಷ ಮಂಜುನಾಥ ಭಂಡಾರಿ, ರೂಮನ್ ಟೆಕ್ನಾಲಜಿಯ ಸಿಇಒ ಮನೀಷ್ ಕುಮಾರ್, ಮಂಗಳೂರು ಕೇಂದ್ರದ ನಿರ್ದೇಶಕ ಹಾಗೂ ತರಬೇತಿ ಪಾಲುದಾರ ಪ್ರಕಾಶ್ ಕೋಟ್ಯಾನ್ ಉಪಸ್ಥಿತರಿದ್ದರು.