ಮಂಗಳೂರು: ರಾಜ್ಯ ಸರಕಾರ ಶಿಶು ಮರಣ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಸರಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲು ಯೋಜಿಸಿದ್ದು, ಮಗು ಹುಟ್ಟಿದ ತತ್ಕ್ಷಣ ಗಂಭೀರ ಆರೋಗ್ಯ ಸಮಸ್ಯೆ ಇದ್ದಲ್ಲಿ ಚಿಕಿತ್ಸೆ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟರು. ಅವರು ಮಂಗಳೂರು ಹೊರವಲಯದ ಉಳ್ಳಾಲ ವ್ಯಾಪ್ತಿಯ ನಾಟೆಕಲ್ ಕಣಚೂರು ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಆಶ್ರಯದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ 'ಕಣಚೂರು ಶಿಶು' ಭವಿಷ್ಯ ನಿಧಿಗೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯದಲ್ಲಿ ಶಿಶು ಮರಣ ಪ್ರಮಾಣ ಒಂದು ವರ್ಷದಲ್ಲಿ 140ರಿಂದ 131ಕ್ಕೆ ಇಳಿಕೆಯಾಗಿದ್ದು, ಮುಂದಿನ ದಿನಗಳಲ್ಲಿ 100ರೊಳಗೆ ನಿಲ್ಲಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಶುದ್ಧ ಕುಡಿಯುವ ನೀರು ಸೇರಿದಂತೆ 'ಆರೋಗ್ಯವಂತ ತಾಯಿ, ಆರೋಗ್ಯವಂತ ಮಗು' ಧ್ಯೇಯವಾಕ್ಯದಂತೆ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಮುಂದಿನ ದಿನಗಳಲ್ಲಿ ಹುಟ್ಟಿದ ನಂತರ 18ರ ವಯಸ್ಸಿನ ವರೆಗೂ ಉಚಿತ ಚಿಕಿತ್ಸೆ ನೀಡುವ ಕುರಿತು ಸರಕಾರ ಚಿಂತನೆ ನಡೆಸುತ್ತಿದೆ ಎಂದರು.
ಕಣಚೂರು ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಅಧ್ಯಕ್ಷ ಯು. ಕಣಚೂರು ಮೋನು ಮಾತನಾಡಿ, ಶಿಶು ಭವಿಷ್ಯ ನಿಧಿ ಯೋಜನೆ ಕೇವಲ ಒಂದು ತಿಂಗಳಿಗೆ ಸೀಮಿತವಾಗದೆ, ಕಣಚೂರು ಆಸ್ಪತ್ರೆಯಲ್ಲಿ ಹುಟ್ಟುವ ಎಲ್ಲ ಮಕ್ಕಳಿಗೂ ಈ ಭವಿಷ್ಯ ನಿಧಿಯನ್ನು ಮುಂದುವರಿಸಲಾಗುವುದು. ಮುಂದಿನ ದಿನಗಳಲ್ಲಿ ಇಂತಹ ಯೋಜನೆಗಳಿಗೆ ಸರಕಾರ ಪ್ರೊತ್ಸಾಹ ನೀಡುವಂತಾಗಬೇಕು ಎಂದರು.