ಮಂಗಳೂರು: ಲೋಕಸಭೆ, ರಾಜ್ಯಸಭೆ ಮತ್ತು ವಿಧಾನಪರಿಷತ್ಗಳಲ್ಲಿ ಮಹಿಳೆಯರಿಗೆ ಶೇ. 50 ಮೀಸಲಾತಿ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಮಹಿಳೆಯರು ರಾಜಕೀಯದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಹೇಳಿದರು. ಮಂಗಳೂರಿನ ಸೈಂಟ್ ಆ್ಯಗ್ನೆಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ 'ಭಾರತದ ರಾಜಕೀಯದಲ್ಲಿ ಯುವಜನರ ಪಾತ್ರ' ಎಂಬ ವಿಷಯದ ಕುರಿತು ನಡೆದ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಅವರು ಉದ್ಘಾಟಿಸಿದರು.
ಇಂದಿನ ಯುವಜನಾಂಗ ಮತದಾನ ಮಾಡುವಲ್ಲಿ ಅನಾಸಕ್ತಿ ತೋರಿಸುತ್ತಿದೆ. ಮಹಿಳೆಯರು, ವಿದ್ಯಾವಂತ ಯುವಶಕ್ತಿ ಇಂದು ರಾಜಕೀಯ ರಂಗದಲ್ಲಿ ಸಕ್ರಿಯರಾಗಿ ಗುರುತಿಸಿಕೊಳ್ಳುತ್ತಿಲ್ಲ. ರಾಜಕೀಯ ಪಕ್ಷಗಳು ಕೂಡ ಯುವಕರನ್ನು ಆ ಕ್ಷೇತ್ರದಲ್ಲಿ ಅವಕಾಶ ಕಲ್ಪಿಸಿಕೊಡಲು ಆಸಕ್ತಿ ವಹಿಸುತ್ತಿಲ್ಲ ಎಂದರು. ರಾಜಕೀಯದಲ್ಲಿ ಗುರುತಿಸಿಕೊಳ್ಳುವ ಮೂಲಕ ಉತ್ತಮ ನಾಯಕತ್ವ ರೂಪಿಸಿಕೊಳ್ಳುವಲ್ಲಿ ಯುವ ಸಮುದಾಯ ಮುಂದೆ ಬರಬೇಕು ಎಂದು ಅವರು ಹೇಳಿದರು.ಕಾಲೇಜು ಪ್ರಾಂಶುಪಾಲೆ ಪ್ರೊ| ಸುಪ್ರಿಯಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.