ಉಡುಪಿ, ಮಾರ್ಚ್ 13: ಮಗುವಿಗೆ ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆಯಲ್ಲಿ ನೀಡುವುದರಿಂದ ಮಗುವಿನ ಭವಿಷ್ಯ ಉಜ್ವಲವಾಗಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಎಲ್. ಹನುಮಂತಯ್ಯ ಹೇಳಿದ್ದಾರೆ.
ಅವರು ಉಡುಪಿಯ ಬೋರ್ಡ್ ಹೈಸ್ಕೊಲ್ ಆವರಣದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಜಿಲ್ಲಾಡಳಿತದ ಸಹಯೋಗದಲ್ಲಿ ನಡೆದ ನುಡಿಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂಗ್ಲೀಷ್ ಮಾಧ್ಯಮದಿಂದ ಮಾತ್ರ ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಲಿದೆ ಎಂದು ಮನೋಭಾವ ಪೋಷಕರಲ್ಲಿ ಮೂಡಿದೆ. ಇದು ಸರಿಯಲ್ಲ ಮಕ್ಕಳಿಗೆ ಮಾತೃಭಾಷೆಯಲ್ಲಿಯ ಪ್ರಾಥಮಿಕ ಶಿಕ್ಷಣ ನೀಡಬೇಕು, ಇತರೆ ಭಾಷೆಗಳನ್ನೂ ಪ್ರೀತಿಸಿ ಆದರೆ ಕನ್ನಡವನ್ನು ಬೆಳೆಸುವ ಕೆಲಸ ಆಗಬೇಕು , ಎಲ್ಲಾ ದೇಶಿ ಭಾಷೆಗಳ ಮೇಲೆ ಇಂಗ್ಲೀಷ್ ನ ಸವಾರಿ ನಿಲ್ಲಬೇಕು , ಇದಕ್ಕಾಗಿ ಏಕರೂಪ ಶಿಕ್ಷಣ ಪದ್ದತಿ ಜಾರಿಗೆ ತರಬೇಕು, ಖಾಸಗಿ ಶಾಲೆಗಳ ಹಾವಳಿಯಿಂದ ಕನ್ನಡ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಬಂದಿದೆ, ರಾಜ್ಯದಲ್ಲಿ ಮಹಾನ್ ಸಾಧನೆ ಮಾಡಿದ ಬಹುತೇಕ ಮಂದಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರೇ ಆಗಿದ್ದಾರೆ, ರಾಜ್ಯದಲ್ಲಿ ಪ್ರಸ್ತುತ 65% ಮಾತ್ರ ಸಾಕ್ಷರತೆ ಇದೆ ಆದರೆ ಇದು 100% ಆಗಬೇಕು, ಈ ನಿಟ್ಟಿನಲ್ಲಿ ಸರಕಾರಿ ಶಾಲೆಗಳ ಶಿಕ್ಷಕರ ಪಾತ್ರ ಪ್ರಮುಖವಾಗಿದ್ದು, ಯಾವೋಬ್ಬ ವಿದ್ಯಾರ್ಥಿಯು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದ ಅವರು, ಗಡಿ ಜಿಲ್ಲೆಗಳ ಶಾಲೆಗಳಲ್ಲಿ ಕನ್ನಡದಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಸರಕಾರ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಡಾ.ಎಲ್. ಹನುಮಂತಯ್ಯ ಹೇಳಿದರು.
ಈ ಕನ್ನಡ ಕನ್ನಡ ನುಡಿಹಬ್ಬ ಕಾರ್ಯಕ್ರಮವನ್ನು , ಗಡಿ ತಾಲೂಕುಗಳಲ್ಲಿಕನ್ನಡ ಸಂಸ್ಕøತಿ, ಪರಂಪರೆಯನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಏರ್ಪಡಿಸಲಾಗಿದ್ದು, ರಾಜ್ಯದ 25 ಗಡಿ ತಾಲೂಕುಗಳಲ್ಲಿ ನಡೆಯಲಿದೆ ಎಂದು ಹೇಳಿದರು.
ಉಡುಪಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಶಿಕ್ಷಕರು ಮಕ್ಕಳಲ್ಲಿ ಕನ್ನಡದ ಬಗ್ಗೆ ಪ್ರೀತಿ ಬೆಳೆಸಬೇಕು, ಪೋಷಕರೂ ಸಹ ಕನ್ನಡದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು, ಅತಿಯಾದ ಇಂಗ್ಲೀಷ್ ವ್ಯಾಮೋಹ ಬೇಡ ಎಂದು ಹೇಳಿದರು.
ಉಡುಪಿ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷ ವಸಂತಿ ಶೆಟ್ಟಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ದೇವದಾಸ ಪೈ ಉಪಸ್ಥಿತರಿದ್ದರು. ಸ್ವಾಮಿ ನಿರೂಪಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ. ಮುರಳೀಧರ ಸ್ವಾಗತಿಸಿದರು.
ಕನ್ನಡ ಹಾಡು, ನೃತ್ಯ, ಜಾನಪದ ಗೀತೆಗಳ ಕಾರ್ಯಕ್ರಮ ನಡೆಯಿತು.