ಮಂಗಳೂರು: ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸುವ ಕುರಿತು ಈಗಾಗಲೇ ಸಭೆ ನಡೆಸಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಪರಿಸರ ಇಲಾಖೆ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸುವುದನ್ನು ನಿರ್ಬಂಧಿಸಿತ್ತು. ಆದರೆ, ಮೀನುಗಾರಿಕೆಗೆ ತೊಂದರೆಯಾಗದಂತೆ ಮರಳು ಹೊರತೆಗೆಯುವ ನಿಟ್ಟಿನಲ್ಲಿ ಒಂದು ವರ್ಷದ ಮಟ್ಟಿಗೆ ಕಾಂಟ್ರಾಕ್ಟ್ ನೀಡಲು ಟೆಂಡರ್ ಕರೆಯಲಾಗುತ್ತಿತ್ತು. ಪ್ರಸ್ತುತ ಸಾಲಿನಲ್ಲೂ ಈ ಬಗ್ಗೆ ಚರ್ಚೆ ನಡೆಸಿ ಅನುಮತಿ ಕೋರಲಾಗಿದ್ದು, ಶೀಘ್ರದಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದರು.
ಸಿಆರ್ಝಡ್ ಹಾಗೂ ಸಿಆರ್ಝಡ್ಯೇತರ ವ್ಯಾಪ್ತಿಯಲ್ಲಿ ಮರಳುಗಾರಿಕೆ ಕಾನೂನು ಪ್ರಕಾರವಾಗಿಯೇ ನಡೆಯಬೇಕು. ಇದರ ವಿರುದ್ಧವಾಗಿ ಯಾರಾದರೂ ಮರಳು ತೆಗೆಯಲು ಪ್ರಯತ್ನಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.