ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಮೂನೆ 9 /11 ಕಡ್ಡಾಯ ಸಂಬಂಧಿಸಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ಜಿಲ್ಲಾ ಪಂಚಾಯತ್ ಚುನಾವಣೆ ಸಂದರ್ಭ ನೀಡಿದ ಹೇಳಿಕೆ ಸುಳ್ಳು ಎಂದು ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ತಿಳಿಸಿದ್ದಾರೆ.
ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಕಾಂಗ್ರೆಸ್ ಶಾಸಕ ಪ್ರಮೋದ್ ಮಧ್ವರಾಜ್ ಅವರು ಸಮಸ್ಯೆ ಶೀಘ್ರ ಇತ್ಯರ್ಥವಾಗಲಿದೆ ಎಂದು ಹೇಳಿಕೆ ನೀಡಿರುವುದೇ ಇದಕ್ಕೆ ನಿದರ್ಶನ ಎಂದು ಪಾಲೆಮಾರ್ ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಗ್ರಾ. ಪಂ. ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ನಮೂನೆ 9 /11 ಸಮಸ್ಯೆ ಬಗೆ ಹರಿದಿದೆ ಎಂಬ ಹೇಳಿಕೆ ನೀಡಿದ್ದರು. ಚುನಾವಣೆ ಮುಗಿದ ಬಳಿಕ ಶಾಸಕ ಜೆ.ಆರ್.ಲೋಬೊ ಅವರು ಸುದ್ದಿಗೋಷ್ಠಿಯಲ್ಲಿ ಸಮಸ್ಯೆ ಬಗೆಹರಿಸಲು ಕಂದಾಯ ಸಚಿವರನ್ನು ವಿನಂತಿಸುವುದಾಗಿ ತಿಳಿಸಿದ್ದರು. ಇದರಿಂದ ಚುನಾವಣೆ ವೇಳೆ ನಾಯಕರು ಜನತೆಗೆ ಸುಳ್ಳು ಮಾಹಿತಿ ನೀಡಿದ್ದು ಬಹಿರಂಗವಾಗಿತ್ತು. ಈಗ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲೂ ಸುಳ್ಳು ಹೇಳಿರುವುದು ಸಾಬೀತಾಗಿದೆ ಎಂದು ಟೀಕಿಸಿದ್ದಾರೆ.