ಮಂಗಳೂರು: ಶ್ರೀರಾಮ ಸೇನೆಯ ಸ್ಥಾಪಕ ಪ್ರಮೋದ್ ಮುತಾಲಿಕ್ 2009ರ ಮಂಗಳೂರು ಪಬ್ ದಾಳಿ ಪ್ರಕರಣದ ವಿಚಾರಣೆಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗಲು ಹಾಗೂ ಇದೇ ವೇಳೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಶನಿವಾರ ಮಂಗಳೂರಿಗೆ ಆಗಮಿಸಿದ್ದು, ಅವರು ಪ್ರಚೋದನಕಾರಿ ಭಾಷಣ ಮಾಡುವ ಮುನ್ಸೂಚನೆ ಹಿನ್ನೆಲೆಯಲ್ಲಿ ಧಾರ್ಮಿಕ ಸಭೆಯಲ್ಲಿ ಭಾಗವಹಿಸದಂತೆ ನಿರ್ಬಂಧ ಹೇರಲಾಯಿತು.
ಶನಿವಾರ ಸಂಜೆ 7 ಗಂಟೆಗೆ ಮಂಗಳೂರಿನ ಪಡೀಲ್ ಅಳಪೆಯ ಹಿಂದೂ ಯುವ ಸೇನೆ ಭಾರ್ಗವ ಶಾಖೆಯಲ್ಲಿ ಹಮ್ಮಿಕೊಂಡಿರುವ ಸಾಮೂಹಿಕ ಶನೀಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಬೇಕಿತ್ತು. ಆದರೆ ಅದರಲ್ಲಿ ಪಾಲ್ಗೊಳ್ಳದಂತೆ ಅವರಿಗೆ ಪೊಲೀಸ್ ಇಲಾಖೆ ನಿರ್ಬಂಧ ವಿಧಿಸಿತ್ತು.
2009ರ ಮಂಗಳೂರು ಪಬ್ ದಾಳಿಗೆ ಸಂಬಂಧಿಸಿ ಮುತಾಲಿಕ್ ಜಾಮೀನು ಪಡೆದಿದ್ದರು. ಆದರೆ ಅವರು ಶರತ್ತು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಅವರ ಜಾಮೀನು ರದ್ದುಪಡಿಸಿ ವಾರಂಟ್ ಜಾರಿಗೊಳಿಸುವಂತೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಿಂದ ರಿಟ್ ಪಿಟಿಷನ್ ದಾಖಲಿಸಲಾಗಿದೆ. ಈ ಪಿಟಿಷನ್ನ ವಿಚಾರಣೆ ಶನಿವಾರ ಸಂಜೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ನಿರ್ಬಂಧ ವಿಧಿಸಲಾಗಿದೆ.