ಮಂಗಳೂರು: ಎತ್ತಿನಹೊಳೆ ಯೋಜನೆ ನಿಲ್ಲಿಸುವಂತೆ ಆಗ್ರಹಿಸಿ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ವತಿಯಿಂದ ಮೇ 16ರಂದು ಅಪರಾಹ್ನ 3 ಗಂಟೆಗೆ ನಗರದ ಜ್ಯೋತಿಯ ಅಂಬೇಡ್ಕರ್ ಸರ್ಕಲ್ನಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಜಾಥಾ ನಡೆಯಲಿದೆ. ಕರಾವಳಿಯ ಜೀವನದಿ ಉಳಿಸುವ ಆಶಯದೊಂದಿಗೆ ಕರಾವಳಿಯ ಸಮಸ್ತ ಜನರು ಈ ಜಾಥಾದಲ್ಲಿ ಪಾಲ್ಗೊಳ್ಳುವಂತೆ ಸಮಿತಿ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೂರು ವರ್ಷಗಳ ಕಾಲ ಅಭಿವೃದ್ಧಿ ಪರ ಆಡಳಿತದ ಮೂಲಕ ಹಲವಾರು 'ಭಾಗ್ಯ'ಗಳನ್ನು ರಾಜ್ಯದ ಜನತೆಗೆ ನೀಡಿದ್ದಾರೆ. ಆದರೆ ಕರಾವಳಿ ಜನತೆಗೆ ಮಾತ್ರ ನೀರಿನ 'ಖೋತಾ ಭಾಗ್ಯ' ನೀಡಿರುವುದು ಬೇಸರದ ಸಂಗತಿ ಎಂದು ಹೇಳಿದರು.ಮಂಗಳೂರಿನಲ್ಲಿ ನೀರಿಗಾಗಿ ಪರದಾಡುವ ಸ್ಥಿತಿ ಎದುರಾಗಿದ್ದು, ಮುಂದೆ ಎತ್ತಿನಹೊಳೆ ಯೋಜನೆ ಜಾರಿಯಾದರೆ ಇಲ್ಲಿನ ಪರಿಸ್ಥಿತಿ ಹೇಗಿರ ಬಹುದು ಎಂದು ಪ್ರಶ್ನಿಸಿದ ವಿಜಯ್ ಕುಮಾರ್ ಶೆಟ್ಟಿ, ಎತ್ತಿನಹೊಳೆ ಯೋಜನೆಯಿಂದ ಕರಾವಳಿಗೆ ಆಗುವ ಬಾಧಕಗಳ ಬಗ್ಗೆ ಮುಖ್ಯಮಂತ್ರಿ ಮನವೊಲಿಸಿ ಯೋಜನೆ ತಡೆಯುವಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದರು.