ಮಂಗಳೂರು: ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಆಶ್ರಯದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ ದ.ಕ.ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಜಾಥಾ ಹಾಗೂ ಪ್ರತಿಭಟನಾ ಸಭೆಯಲ್ಲಿ ವಿವಿಧ ಧರ್ಮ, ಪಕ್ಷ, ಸಂಘಟನೆಗಳ ನಾಯಕರು ಭಾಗವಹಿಸಿದ್ದರು.
ಎತ್ತಿನಹೊಳೆ ಯೋಜನೆ ಎಂಬ ಹೆಸರಿನಲ್ಲಿ ನೇತ್ರಾವತಿ ನದಿಯ ನೀರನ್ನು ಬೆಂಗಳೂರು, ಕೋಲಾರ,ತುಮಕೂರು ಮೊದಲಾದ ಜಿಲ್ಲೆಗಳಿಗೆ ಹರಿಸುವ ಯೋಜನೆಯನ್ನು ಕೈ ಬಿಡಬೇಕೆಂದು ಆಗ್ರಹಿಸಲಾಯಿತು. ಮಧ್ಯಾಹ್ನ ೩ ಗಂಟೆಯಿಂದ ಆರಂಭಗೊಂಡ ಜಾಥಾ ನಾಲ್ಕು ಗಂಟೆ ಸುಮಾರಿಗೆ ಜಿಲ್ಲಾಧಿಕಾರಿ ಕಚೇರಿ ಬಳಿ ತಲುಪಿ ಅಲ್ಲಿ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗವಹಿಸಿದ್ದರು.