ಮಂಗಳೂರು: ಎತ್ತಿನ ಹೊಳೆ ಯೋಜನೆ ವಿರುದ್ಧದ ಮುಂದಿನ ಹಂತದ ಹೋರಾಟದ ಭಾಗವಾಗಿ ಸರಕಾರದ ಮೇಲೆ ಒತ್ತಡ ತರಲು ಸರ್ವ ಪಕ್ಷಗಳ ನಾಯಕರನ್ನು ಭೇಟಿಯಾಗಿ ಬಳಿಕ ಮುಖ್ಯಮಂತ್ರಿ ಬಳಿಗೆ ನಿಯೋಗ ಕೊಂಡೊಯ್ಯಲು ಉದ್ದೇಶಿಸಲಾಗಿದೆ ಎಂದು ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಕೆ. ವಿಜಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ವಿವಿಧ ಪಕ್ಷಗಳ ಮುಖಂಡರಾದ ಡಾ| ಜಿ. ಪರಮೇಶ್ವರ್, ಬಿ.ಎಸ್. ಯಡಿಯೂರಪ್ಪ,ಎಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿಯಾಗಿ ವಿಷಯ ಮನವರಿಕೆ ಮಾಡಿ ಬಳಿಕ ಮುಖ್ಯಮಂತ್ರಿ ಬಳಿಗೆ ನಿಯೋಗ ಕೊಂಡೊಯ್ಯಲಾಗುವುದು.
ವಿವಿಧ ಧಾರ್ಮಿಕ ಮುಖಂಡರು, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರು ಮತ್ತು ಸರ್ವ ಪಕ್ಷಗಳ ನಾಯಕರು ನಿಯೋಗದಲ್ಲಿರುವರು ಎಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.