ಮಂಗಳೂರು: ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ಎಲ್ಲ ಅಡೆತಡೆಗಳು ನಿವಾರಣೆಯಾಗಿವೆ ಎಂದು ಸಾರ್ವಜನಿಕವಾಗಿ ಹೇಳುವ ಮೂಲಕ ಸಂಸದ ವೀರಪ್ಪ ಮೊಯ್ಲಿ ಮತ್ತು ಯೋಜನೆಯ ಸೂಪರಿಂಟೆಂಡೆಂಟ್ ಎಂಜಿನಿಯರ್ ವೇಣುಗೋಪಾಲ್ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ.15 ದಿನಗಳೊಳಗೆ ಈ ಇಬ್ಬರು ಕ್ಷಮೆ ಯಾಚಿಸದಿದ್ದರೆ ನ್ಯಾಯಾಂಗ ನಿಂದನೆ ದೂರು ದಾಖಲಿಸಲಾಗುವುದು ಎಂದು ಪಶ್ಚಿಮ ಘಟ್ಟ ಸಂರಕ್ಷಣಾ ಸಮಿತಿಯ ಕೆ.ಎನ್. ಸೋಮಶೇಖರ್ ತಿಳಿಸಿದ್ದಾರೆ.
ಎತ್ತಿನಹೊಳೆ ಯೋಜನೆಯ ಕಾಮಗಾರಿಗೆ ಸಂಬಂಧಿಸಿ ಚೆನ್ನೈಯಲ್ಲಿರುವ ದಕ್ಷಿಣ ವಲಯ ಹಸಿರು ನ್ಯಾಯ ಮಂಡಳಿಯಲ್ಲಿ ಇನ್ನೂ ಮೂರು ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇವೆ. ಯೋಜನೆಯ ಪರವಾಗಿ ನ್ಯಾಯ ಮಂಡಳಿಯು ಇದುವರೆಗೆ ಯಾವುದೇ ಆದೇಶವನ್ನು ಹೊರಡಿಸಿಲ್ಲ. ಯೋಜನೆಗೆ ಕಾನೂನು ಸಮ್ಮತವಾದ ಅನುಮತಿ ದೊರೆತಿಲ್ಲ. ಹಾಗಿರುವಾಗ ವೀರಪ್ಪ ಮೊಲಿ ಮತ್ತು ವೇಣುಗೋಪಾಲ್ ಅವರು ಯೋಜನೆಯ ಅಡೆತಡೆಗಳೆಲ್ಲ ನಿವಾರಣೆಯಾಗಿವೆ ಎಂಬ ಹೇಳಿಕೆ ನೀಡಿರುವುದು ಖಂಡನೀಯ ಎಂದವರು ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.