ಮಂಗಳೂರು: ದ.ಕ. ಜಿಲ್ಲೆಯಲ್ಲಿ ಡೆಂಗ್ಯೂ ಸಮಸ್ಯೆ ಹಿನ್ನೆಲೆಯಲ್ಲಿ ನಡೆಸುವ ಎಲಿಸಾ ಪರೀಕ್ಷೆಗೆ ಖಾಸಗಿ ಆಸ್ಪತ್ರೆಗಳು ನಿಗದಿತ ಮೊತ್ತಕ್ಕಿಂತ ಹೆಚ್ಚು ಶುಲ್ಕ ಪಡೆಯುತ್ತಿರುವ ಕುರಿತು ದ.ಕ. ಜಿಲ್ಲಾ ಆರೋಗ್ಯ ಅಧಿಕಾರಿಗೆ ದೂರು ನೀಡಿದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಖಾದರ್ ಹೇಳಿದರು.ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಸೋಮವಾರ ಆರೋಗ್ಯ ಸಚಿವ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ರೋಗ ಪತ್ತೆಗಾಗಿ ನಡೆಸುವ ಎಲಿಸಾ ಪರೀಕ್ಷೆಗೆ 500 ರೂ. ನಿಗದಿಪಡಿಸಲಾಗಿದ್ದರೂ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ 2,000 ರೂ. ತನಕ ಶುಲ್ಕ ಪಡೆಯಲಾಗುತ್ತಿದೆ ಎಂದು ಅವರು ಹೇಳಿದರು.ಡೆಂಗ್ಯೂ ರೋಗದ ವೇಳೆ ರಕ್ತಕಣಗಳು ಕತ್ತವೆ ಎಂಬ ಆತಂಕ ಸೃಷ್ಟಿಸಿ ಜನರನ್ನು ಗಾಬರಿಗೊಳಿಸಲಾಗುತ್ತಿದೆ.
ಕೆಲವೊಮ್ಮೆ ಅಗತ್ಯವಿಲ್ಲದವರಿಗೂ ರಕ್ತಕಣಗಳನ್ನು ನೀಡುವ ಕೆಲಸ ಮಾಡಲಾಗುತ್ತಿದೆ. ಜನರಲ್ಲಿ ಈ ರೋಗ ಲಕ್ಷಣಗಳ ಬಗ್ಗೆ ಹಾಗೂ ಚಿಕಿತ್ಸೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಡಾ| ಶ್ರೀನಿವಾಸ ಕಕ್ಕಿಲ್ಲಾಯ ತಿಳಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈಗಷ್ಟೇ ಮಳೆಗಾಲ ಪ್ರಾರಂಭವಾಗುತ್ತಿದೆ. ಮುಂದಿನೆರಡು ತಿಂಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಅಧಿಕವಾಗಿರುವ ಹಿನ್ನೆಲೆಯಲ್ಲಿ ಆರೋಗ್ಯಾಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದರು.