ಮಂಗಳೂರು: ಡಿವೈಎಸ್ಪಿ ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ಅವರನ್ನು ತತ್ಕ್ಷಣ ಬಂಧಿಸಬೇಕು, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣಬ್ ಮೊಹಂತಿ, ಎ.ಎಂ. ಪ್ರಸಾದ್ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಹಾಗೂ ಪ್ರಕರಣವನ್ನು ಸಿಬಿಐಗೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ಬಂಟ್ವಾಳ, ಕಡಬ, ಪುತ್ತೂರು, ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ಹಾಗೂ ಬೆಳ್ತಂಗಡಿಯಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ಜರಗಿತು. ಸುರತ್ಕಲ್ ಕೃಷ್ಣಾಪುರದಲ್ಲಿ ಬಿಜೆಪಿ ಮುಖಂಡ ಉಮಾನಾಥ ಕೋಟ್ಯಾನ್ ನೇತೃತ್ವದ ಸಭೆಯಲ್ಲಿ ಪ್ರಕರಣವನ್ನು ಖಂಡಿಸಲಾಯಿತು.ದಕ್ಷ ಪೊಲೀಸ್ ಅಧಿಕಾರಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಹಾಗೂ ಸಚಿವ ಕೆ.ಜೆ. ಜಾರ್ಜ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಮಂಗಳೂರು ದಕ್ಷಿಣ ವಲಯದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶನಿವಾರ ಪ್ರತಿಭಟನೆ ನಡೆಯಿತು.
ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜ್ಯದಲ್ಲಿ ಅಧಿಕಾರಿಗಳ ಹತ್ತಿಕ್ಕುವ ಯತ್ನ ಹಾಗೂ ಆತ್ಮಹತ್ಯೆ ಪ್ರಕರಣ ಕಂಡಾಗ ಕಾರ್ಯಾಂಗ ಹಾಗೂ ಶಾಸಕಾಂಗದ ನಡುವೆ ಒಂದು ರೀತಿಯ ಸಂಘರ್ಷ ನಡೆಯುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ. ಎಂತಹ ಕಠಿನ ಪರಿಸ್ಥಿತಿಯನ್ನೂ ಸಮರ್ಥವಾಗಿ ಎದುರಿಸಬಲ್ಲವರಾಗಿದ್ದ ಡಿವೈಎಸ್ಪಿ ಪಿ.ಎಂ.ಕೆ. ಗಣಪತಿ ಅವರಂತಹ ದಕ್ಷ ಅಧಿಕಾರಿಗಳೇ ಆತ್ಮಹತ್ಯೆ ಮಾಡಿಕೊಳ್ಳುವಂತಹ ಸನ್ನಿವೇಶ ರಾಜ್ಯದಲ್ಲಿ ಉಂಟಾಗಿದೆ. ಸಿದ್ದರಾಮಯ್ಯನವರ ಆಪ್ತ ಮರಿಗೌಡ ಜಿಲ್ಲಾಧಿಕಾರಿ ಶಿಖಾ ಅವರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿದ್ದರೂ ಇಲ್ಲಿ ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.