ಮಂಗಳೂರು: ಕೇಂದ್ರ ಸರಕಾರ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ವಯ ಜಿಲ್ಲೆಯ ನೀರಿನ ಮೂಲ, ಲಭ್ಯವಿರುವ ನೀರು, ನೀರಿನ ಬೇಡಿಕೆ ಮತ್ತು ಕೊರತೆ, ನೀರಿನ ಕೊರತೆ ಭರ್ತಿ ಮಾಡಲು ಮುಂದಿನ 5 ವರ್ಷಗಳಲ್ಲಿ ಕೈಗೊಳ್ಳಬಹುದಾದ ಯೋಜನೆ ಇತ್ಯಾದಿ ವಿವರ ಒಳಗೊಂಡಿರುವ ಜಿಲ್ಲಾ ಮಟ್ಟದ ಸಮಗ್ರ ನೀರಾವರಿ ಯೋಜನೆ ತಯಾರಿಸುವ ಪ್ರಕ್ರಿಯೆ ಆರಂಭ ಗೊಂಡಿದ್ದು, ಜುಲೈ ಅಂತ್ಯದ ವೇಳೆಗೆ ಕರಡು ಯೋಜನೆಯನ್ನು ಸರಕಾರಕ್ಕೆ ಕಳುಹಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಹೇಳಿದರು.
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಎನ್ಜಿಒ ಮತ್ತು ರೈತ ಸಂಘದ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ ವಿವಿಧ ಸಲಹೆ, ಸೂಚನೆಗಳನ್ನು ನೀಡಿದರು.ನೀರಿಗೆ ಸಂಬಂಧಪಟ್ಟು ನೀರಾವರಿ, ಕೃಷಿ, ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ, ಅರಣ್ಯ, ನಗರಾಡಳಿತ, ಜಿ.ಪಂ.ಹಾಗೂ ಇನ್ನಿತರ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಿಸುವ ಎಲ್ಲ ಯೋಜನೆಗಳನ್ನು ಒಗ್ಗೂಡಿಸಿ ಜಿಲ್ಲಾ ಮಟ್ಟದಲ್ಲಿ ಒಂದೇ ಯೋಜನೆ ತಯಾರಿಸುವುದು ಈ ಯೋಜನೆಯ ಮುಖ್ಯ ಗುರಿ. ಈಗಾಗಲೇ ಕರಡು ಯೋಜನೆ ತಯಾರಿಸಲಾಗಿದ್ದು, ವಿವಿಧ ಅಭಿಪ್ರಾಯ ಮತ್ತು ಸಲಹೆ ಪಡೆದು ಅದನ್ನು ಪರಿಷ್ಕರಿಸಿ ಇದೇ ಜು. 31ರೊಳಗೆ ರಾಜ್ಯ ಸರಕಾರಕ್ಕೆ ಕಳುಹಿಸಲಾಗುವುದು. ರಾಜ್ಯ ಸರಕಾರ ಅದನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಿದೆ ಎಂದು ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ವಿವರಿಸಿದರು.