ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿ ಅಲುಗಾಡುತ್ತಿದೆ. ಇನ್ನೂ ಕಾಲ ಮಿಂಚಿಲ್ಲ. ಹೈಕಮಾಂಡ್ ಏನು ಹೇಳುತ್ತದೆ ಎನ್ನುವುದನ್ನು ಅರಿಯಲು ಕೂಡಲೇ ದಿಲ್ಲಿಗೆ ತೆರಳಿ ಎಂದು ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಅನುಭವಿ ರಾಜಕಾರಣಿ ಸಿದ್ದರಾಮಯ್ಯ ಕಣ್ಣಿದ್ದೂ ಕುರುಡರಾಗಿದ್ದಾರೆ. ಕಿವಿ ಇದ್ದೂ ಕಿವುಡರಾಗಿದ್ದಾರೆ. ಸರಕಾರದ ಇಮೇಜ್ ಹಾಳಾಗುತ್ತಿದೆ. ಸಿದ್ದರಾಮಯ್ಯ ತಾವೇ ಬುದ್ದಿವಂತರೆಂದು ಭಾವಿಸಿದ್ದಾರೆ.
ಕಾರ್ಮಿಕರ ಮುಷ್ಕರದ ಬಗ್ಗೆ ಹಿರಿಯರಲ್ಲಿ ಚರ್ಚಿಸಬಹುದಿತ್ತಲ್ಲವೇ? ನಿಮ್ಮ ಬುದ್ಧಿಗೇಡಿ ವರ್ತನೆಯಿಂದಾಗಿ ಕಾಂಗ್ರೆಸ್ ಅವನತಿಯ ಹಾದಿಯಲ್ಲಿದೆ ಎಂದು ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.ನಗರದ ಪ್ರೆಸ್ ಕ್ಲಬ್ನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಸಿದ್ದರಾಮಯ್ಯ ಕೂಡಲೇ ಹೈಕಮಾಂಡ್ ಜತೆ ಚರ್ಚೆ ನಡೆಸದಿದ್ದರೆ ಹೈಕಮಾಂಡ್ ಕೂಡಲೇ ಶಾಸಕರ ಸಭೆ ಕರೆಯಲಿದೆ. ಕಾರ್ಮಿಕರ ಸಮಸ್ಯೆಯನ್ನು ಅತ್ಯಂತ ಚೆನ್ನಾಗಿ ಬಲ್ಲ ಆಸ್ಕರ್ ಫೆರ್ನಾಂಡಿಸ್ರನ್ನು ಸಿಎಂ ಮಾಡಬಹುದು. ಅಥವಾ ಮಲ್ಲಿಕಾರ್ಜುನ ಖರ್ಗೆಯವರೂ ಸಿಎಂ ಆಗಬಹುದು.
ಮಹಿಳೆಯರಿಗೆ ಸ್ಥಾನ ನೀಡಲು ನಿರ್ಧರಿಸಿದರೆ ಸ್ತ್ರೀಶಕ್ತಿಗೆ ಹೊಸ ರೂಪ ಕೊಟ್ಟ ಮೋಟಮ್ಮ ಮುಖ್ಯಮಂತ್ರಿ ಆಗಬಹುದು. ಕೆಪಿಸಿಸಿ ಅಧ್ಯಕ್ಷ , ಗೃಹಸಚಿವ ಪರಮೇಶ್ವರ್ ಕೂಡಾ ಮುಖ್ಯಮಂತ್ರಿ ಸ್ಥಾನ ಪಡೆಯುವ ಅರ್ಹತೆ ಹೊಂದಿದ್ದಾರೆ ಎಂದು ಪೂಜಾರಿ ಗುಡುಗಿದರು.ಹೆಚ್ಚಿನ ಸಂದರ್ಭಗಳಲ್ಲಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಪೂಜಾರಿ ಈ ಬಾರಿ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದುದರ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಪಕ್ಷಕ್ಕೆ ವಿರುದ್ಧವಾಗಿ ಮಾತನಾಡುವವರು ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಬಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರಿಗೆ ಮುಜುಗರ ಆಗಬಾರದು ಎಂದು ಇಲ್ಲಿ ಸುದ್ದಿಗೋಷ್ಠಿ ನಡೆಸಿದ್ದೇನೆ. ನಾನು ಪಕ್ಷದ ಹಿತಕ್ಕಾಗಿ ಆ ರೀತಿ ಮಾತನಾಡುತ್ತಿದ್ದೇನೆ ಎನ್ನುವುದು ಅವರಿಗೆ ತಿಳಿದಿಲ್ಲ ಎಂದರು.