ಮಂಗಳೂರು: ಡಿವೈಎಸ್ಪಿ ಗಣಪತಿ ಸಾವಿನ ಕುರಿತು ಬೊಬ್ಬೆ ಹಾಕುವ ಬಿಜೆಪಿಯವರು ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಅವರ ಸಾವಿನ ಪ್ರಕರಣಕ್ಕೆ ಬಂದಾಗ ಮಾತನಾಡುತ್ತಿಲ್ಲ. ಅಂದರೆ ಈ ಪ್ರಕರಣದಲ್ಲಿ ಸಂಘ ಪರಿವಾರದ ನಾಯಕರ ಕೈವಾಡವಿರುವುದು ಈಗಾಗಲೇ ಸ್ಪಷ್ಟವಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ. ರಮಾನಾಥ ರೈ ಆರೋಪಿಸಿದರು.ಅವರು ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.ಡಿವೈಎಸ್ಪಿ ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಸಚಿವ ಕೆ.ಜೆ. ಜಾರ್ಜ್ ಈಗಾಗಲೇ ರಾಜೀನಾಮೆ ನೀಡಿದ್ದಾರೆ.
ಆದರೆ ಕೇಂದ್ರ ಸರಕಾರದ 14 ಮಂದಿ ಸಚಿವರು ಕ್ರಿಮಿನಲ್ ಪ್ರಕರಣಗಳಲ್ಲಿ ಗುರುತಿಸಿಕೊಂಡಿದ್ದರೂ ಇನ್ನೂ ರಾಜೀನಾಮೆ ನೀಡಿಲ್ಲ ಎಂದು ಅವರು ಹೇಳಿದರು.ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ 13 ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸಿದ್ದೆವು. ಆದರೆ, ಅಂದು ಬಿಜೆಪಿಯವರಿಗೆ ಸಿಬಿಐ ಮೇಲೆ ವಿಶ್ವಾಸವಿರಲಿಲ್ಲ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೂರೇ ವರ್ಷಗಳಲ್ಲಿ 8 ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಿದೆ ಎಂದರು.ರಾಜ್ಯದ ಪೊಲೀಸರು, ಸರಕಾರಿ ಅಧಿಕಾರಿಗಳ ಕುರಿತು ಮೊಸಳೆ ಕಣ್ಣೀರು ಸುರಿಸುವ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಅವರ ಸರಕಾರದ ಕಿರುಕುಳ ತಾಳಲಾರದೆ ಪ್ರಮುಖ ಅಧಿಕಾರಿಗಳು ರಾಜೀನಾಮೆ ನೀಡಿರುವುದು ಗೊತ್ತಿಲ್ಲವೇ.? ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾಕರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದು ಅವರು ನುಡಿದರು.ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸಚಿವೆ ಸ್ಮೃತಿ ಇರಾನಿ ಸಹಿತ ಹಲವರ ಹೆಸರಿದ್ದರೂ, ಅವರ್ಯಾರೂ ರಾಜೀನಾಮೆ ನೀಡಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಸಾಧನೆ ಮರೆಮಾಚುವ ದೃಷ್ಟಿಯಲ್ಲಿ ಬಿಜೆಪಿ ಸಣ್ಣ ವಿಚಾರಗಳನ್ನು ಎತ್ತಿಕೊಂಡು ರಾಜ್ಯ ಸರಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದರು.