ಮಂಗಳೂರು: ಭಾರತೀಯ ಜನತಾ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಮಂಗಳವಾರ ದಿಲ್ಲಿಯಲ್ಲಿ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.ಅವರು ಸೋಮವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಪಕ್ಷದ ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕರಾಗಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲ ನಾಯಕರು ಒಟ್ಟಾಗಿ ಶ್ರಮಿಸಲಿದ್ದಾರೆ ಎಂದರು.
ಪಕ್ಷದೊಳಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರುವುದು ನಿಜ. ಆಗಸ್ಟ್ 23ರಂದು ದಿಲ್ಲಿಯಲ್ಲಿ ನಡೆಯುವ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಇದನ್ನು ಪರಿಹರಿಸುವ ವಿಶ್ವಾಸ ಇದೆ. ಪಕ್ಷದ ಚೌಕಟ್ಟಿನೊಳಗೆ ಎಲ್ಲವೂ ನಿರ್ಧಾರವಾಗಬೇಕು, ಹೊರಗಡೆ ಮಾತನಾಡುವುದು ಸರಿಯಲ್ಲ ಎಂದರು.ನಮ್ಮೊಳಗಿನ ಭಿನ್ನಮತದ ಪರಿಣಾಮದ ಬಗ್ಗೆ ನಾವು ಈ ಹಿಂದೆ ಪಾಠ ಕಲಿತಿದ್ದೇವೆ. ಈ ಹಿನ್ನೆಲೆಯಲ್ಲಿ ಎಲ್ಲ ನಾಯಕರೂ ಒಟ್ಟಾಗಿ ಶ್ರಮಿಸಿ ಮತ್ತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ ಎಂದು ಮಾಜಿ ಮುಖ್ಯ ಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ನ ದುರಾಡಳಿತ ಮತ್ತು ಸಚಿವರ ನಿಷ್ಕ್ರಿಯತೆಯಿಂದ ಜನರು ಬೇಸತ್ತಿದ್ದಾರೆ. ಸ್ಪೀಕರ್ ಸ್ಥಾನದಲ್ಲಿದ್ದಾಗ ರಾಜ್ಯ ಸರಕಾರವನ್ನು ಟೀಕಿಸುತ್ತಿದ್ದರು ಎಂಬ ಕಾರಣಕ್ಕೆ ಕಾಗೋಡು ತಿಮ್ಮಪ್ಪ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಕಾಂಗ್ರೆಸ್ ಪರಿಸ್ಥಿತಿ ಅಧೋಗತಿಗೆ ಇಳಿದಿದೆ ಎಂದು ಅವರು ಆರೋಪಿಸಿದರು.