ಮಂಗಳೂರು: ಬೆಂಗಳೂರಿನಲ್ಲಿ ಆಮ್ನೆಸ್ಟಿ ಇಂಟರ್ನ್ಯಾಶನಲ್ ಸಂಸ್ಥೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ವಿರುದ್ಧ ಹಾಗೂ ದೇಶ ದ್ರೋಹದ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕೆಂದು ಆಗ್ರಹಿಸಿ ದ.ಕ. ಬಿಜೆಪಿ ನೇತೃತ್ವದಲ್ಲಿ ಜಿಲ್ಲೆಯ ಪ್ರತೀ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯಾ ಬಿಜೆಪಿ ಕ್ಷೇತ್ರ ಸಮಿತಿ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ವೇದವ್ಯಾಸ ಕಾಮತ್, ಕ್ಯಾ| ಗಣೇಶ್ ಕಾರ್ಣಿಕ್, ಕೆ. ಮೋನಪ್ಪ ಭಂಡಾರಿ ಮೊದಲಾದವರು ನೇತೃತ್ವ ವಹಿಸಿದ್ದರು. ಮಂಗಳೂರು ನಗರ ಉತ್ತರ ವಿಧಾನ ಸಭಾ ಬಿಜೆಪಿ ವಲಯದಿಂದ ಕಾವೂರಿನಲ್ಲಿ ಪ್ರತಿಭಟನೆ ನಡೆದಿದ್ದು, ಡಾ| ಭರತ್ ಶೆಟ್ಟಿ, ಕಿಶೋರ್, ಸುಮಿತ್ರ ಕರಿಯ ನೇತೃತ್ವ ವಹಿಸಿದ್ದರು.