ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಉದ್ಯಮಗಳು ಸ್ಥಾಪನೆಗೊಂಡು ಸ್ಥಳೀಯ ಯುವಜನತೆಗೆ ಉದ್ಯೋಗಾವಕಾಶ ದೊರಕಿಸಿ ಕೊಡಲು ಅನುಕೂಲವಾಗುವಂತೆ ಇಲ್ಲಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಬೆಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶವನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಶಾಸಕ ಜೆ.ಆರ್. ಲೋಬೊ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಇಂತಹ ಸಮಾವೇಶವನ್ನು ಏರ್ಪಡಿಸಿದರೆ ಹೂಡಿಕೆದಾರರಿಂದ ನಿರೀಕ್ಷಿತ ಸ್ಪಂದನೆ ಸಿಗಲಾರದು ಎಂಬ ಭಾವನೆ ಇರುವುದ ರಿಂದ ಬೆಂಗಳೂರಿನಲ್ಲಿ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದರು. ಮಂಗಳೂರಿನಲ್ಲಿ ರಸ್ತೆ ಸಂಪರ್ಕ, ಬಂದರು, ವಿಮಾನ ನಿಲ್ದಾಣ, ಉತ್ತಮ ಶಿಕ್ಷಣ ವ್ಯವಸ್ಥೆ ಮತ್ತಿತರ ಮೂಲ ಸೌಲಭ್ಯಗಳಿದ್ದರೂ ಉದ್ಯಮಗಳ ಸಂಖ್ಯೆ ತೀರಾ ಕಡಿಮೆ. ಹಾಗಾಗಿ ಇಲ್ಲಿನ ಯುವಕ/ ಯುವತಿಯರು ವಿದ್ಯಾಭ್ಯಾಸ ಮುಗಿದ ಕೂಡಲೇ ಕ್ಯಾಂಪಸ್ ಸಂದರ್ಶನದ ಮೂಲಕ ಉದ್ಯೋಗಕ್ಕಾಗಿ ದೂರದ ಬೆಂಗಳೂರು, ಮುಂಬಯಿ ಅಥವಾ ವಿದೇಶಗಳಿಗೆ ಹೋಗುತ್ತಿದ್ದಾರೆ. ಇದರಿಂದಾಗಿ ಇಲ್ಲಿ ಯುವಜನರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ವಿವರಿಸಿದರು.