ಮಂಗಳೂರು: ಪಂಪ್ವೆಲ್ನಿಂದ ತಲಪಾಡಿ ವರೆಗಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯುತ್ತಿರುವ ಚತುಷ್ಪಥ ರಸ್ತೆ ಹಾಗೂ ವಿಸ್ತರಣೆ ಕಾಮಗಾರಿಯಿಂದ ವಾಹನಗಳು ಸಾಗಲು ಮಾತ್ರವಲ್ಲ, ಸುತ್ತಮುತ್ತಲಿನ ಜನರಿಗೂ ಸಹಾಯಕವಾಗಬೇಕು.
ಹೆದ್ದಾರಿಗಾಗಿ ಸುಮಾರು 780 ಕೋ.ರೂ. ವ್ಯಯಿಸುತ್ತಿರುವಾಗ ಸಾರ್ವಜನಿಕರ ಹಿತದೃಷ್ಟಿಯಿಂದ 10 ಕೋ.ರೂ.ಗಳಲ್ಲಿ ಸರ್ವಿಸ್ ರಸ್ತೆ, ಪ್ರಮುಖ ಜಂಕ್ಷನ್ಗಳಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಿಸಲು ಪ್ರಾಧಿಕಾರ ಮುಂದಾಗಬೇಕು ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.ರಾಷ್ಟ್ರೀಯ ಹೆದ್ದಾರಿ 66ರ ವಿಸ್ತರಣೆಯಿಂದ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಲಾದ ಸಭೆಯಲ್ಲಿ ಮಾತನಾಡಿದ ಅವರು, ರಸ್ತೆ ವಿಸ್ತರಣೆಯಾದಂತೆ ಜನರಿಗೆ ರಸ್ತೆ ದಾಟಲು ಸಾಕಷ್ಟು ಸಮಸ್ಯೆಗಳಾಗುತ್ತವೆ.
ಅಲ್ಲದೇ ಕೆಲವೆಡೆ ಹೆಚ್ಚು ಅಪಘಾತಗಳು ಸಂಭವಿಸುತ್ತವೆ. ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಹೆದ್ದಾರಿಯ ಪ್ರಮುಖ ಜಂಕ್ಷನ್ಗಳಾದ ಎಕ್ಕೂರು, ಕಲ್ಲಾಪು, ಕುಂಪಲ, ಕೋಟೆಕಾರು ಹಾಗೂ ತೊಕ್ಕೊಟ್ಟುಗಳಲ್ಲಿ ಸಾರ್ವಜನಿಕರು ರಸ್ತೆ ದಾಟಲು ಅನುಕೂಲವಾಗುವಂತೆ ಪಾದಚಾರಿ ಮೇಲ್ಸೇತುವೆ ನಿರ್ಮಿಸಬೇಕು.