ಮಂಗಳೂರು: ವಿದ್ಯಾರ್ಥಿಗಳನ್ನೇ ಗುರಿಯಾಗಿರಿಸಿ ಗಾಂಜಾ ಮತ್ತಿತರ ಮಾದಕ ವಸ್ತುಗಳ ಮಾರಾಟ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿ ಶಾಲಾ ಕಾಲೇಜುಗಳಲ್ಲಿ ಅಲ್ಲಿನ ಶಿಕ್ಷಕ ರೊಬ್ಬರನ್ನು ಇಂತಹ ಚಟುವಟಿಕೆಗಳ ಮೇಲೆ ನಿಗಾ ಇಡಲು ನೋಡಲ್ ಆಗಿ ನೇಮಿಸಲು ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ ಸೂಚಿಸಿದ್ದಾರೆ.ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಮಾದಕ ವಸ್ತು ಸೇವನೆ ನಿಷೇಧ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತೀ ತಿಂಗಳು ವರದಿ ಶೈಕ್ಷಣಿಕವಾಗಿ ಮುಂದುವರಿದು ಉತ್ತಮ ವಿದ್ಯಾಸಂಸ್ಥೆಗಳಿರುವ ದ.ಕ. ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ದಾಸರಾಗುತ್ತಿರುವ ಪ್ರಕರಣಗಳು ಕಂಡುಬರುತ್ತಿರುವುದು ಕಳವಳಕಾರಿಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ನುರಿತ ಶಿಕ್ಷಕರೊಬ್ಬರನ್ನು ನೇಮಿಸಿ, ವಿದ್ಯಾರ್ಥಿಗಳಲ್ಲಿ ಹಾಗೂ ತಮ್ಮ ಸಂಸ್ಥೆಯ ಪರಿಸರದಲ್ಲಿ ಮಾದಕ ವಸ್ತುಗಳ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು. ಈ ಶಿಕ್ಷಕರು ಪ್ರತೀ ತಿಂಗಳು ವರದಿ ಸಲ್ಲಿಸಬೇಕು. ಈ ವರದಿಯನ್ನು ಸ್ಥಳೀಯ ಪೊಲೀಸ್ ಠಾಣೆಗೂ ಕಳುಹಿಸಿ, ಸೂಕ್ತ ಕ್ರಮ ಜರಗಿಸುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು.