ಮಂಗಳೂರು: ಶ್ರೀ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಲು ರಾಜ್ಯ ಮುಂದಾಗಿದೆ ಎಂಬ ವರದಿಗಳನ್ನು ಅಲ್ಲಗಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಂತಹ ಯಾವುದೇ ಪ್ರಸ್ತಾವ ಸರಕಾರದ ಬಳಿ ಇಲ್ಲ ಎಂದು ಹೇಳಿದ್ದಾರೆ.
ದ.ಕ. ಜಿಲ್ಲೆಯಲ್ಲಿ ರವಿವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಶ್ರೀರಾಮಚಂದ್ರ ಪುರಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡುವ ಚಿಂತನೆ ಸರಕಾರ ಹೊಂದಿಲ್ಲ ಎಂದರು.ಶ್ರೀಗೋಕರ್ಣ ದೇವಾಲಯವನ್ನು ಮರಳಿ ವಶಕ್ಕೆ ಪಡೆದುಕೊಳ್ಳಲು ಸರಕಾರ ಮುಂದಾಗಿದೆ ಎಂಬ ವರದಿಗಳ ಕುರಿತಂತೆ ಪ್ರಶ್ನೆಗೆ ಉತ್ತರಿಸಿದ ಅವರು ದೇಗುಲವನ್ನು ಕೂಡ ವಶಕ್ಕೆ ಪಡೆಯುವ ಪ್ರಸ್ತಾವ ಸರಕಾರದ ಮುಂದಿಲ್ಲ.
ಈ ಕುರಿತಂತೆ ಹೈಕೋರ್ಟ್ನಲ್ಲಿ ಖಾಸಗಿ ವ್ಯಕ್ತಿಯೋರ್ವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಇದರ ಮೇಲೆ ಸರಕಾರದ ನಿಲುವು ಏನು ಎಂಬುದಾಗಿ ನ್ಯಾಯಾಲಯ ಕೇಳಿದೆ. ಸರಕಾರ ತನ್ನ ನಿಲುವು ಸಲ್ಲಿಸಲಿದೆ ಎಂದರು.