ಮಂಗಳೂರು: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ನಿರ್ಣಾಯಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂಬ ವಿಶ್ಲೇಷಣೆಗಳು ಸರಿಯಲ್ಲ. ಅಧಿಕಾರವನ್ನು ಪಡೆಯುವ ಮೂಲಕ ಆಡಳಿತ ಪಕ್ಷವಾಗಿ ಮೂಡಿಬರಲಿದೆ ಎಂದು ಪಕ್ಷದ ರಾಷ್ಟ್ರೀಯಾಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸಕ್ಕೆ ಶನಿವಾರ ಆಗಮಿಸಿದ ಸಂದರ್ಭದಲ್ಲಿ ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ರಾಜ್ಯದ ಎಲ್ಲ 224 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಜೆಡಿಎಸ್ ನಿರ್ಣಾಯಕ ಶಕ್ತಿಯಾಗಲಿದೆ ಎಂಬ ಲೆಕ್ಕಚಾರ ಬೇಡ. ನಾವೇ ಸರಕಾರ ರಚಿಸುವ ಶಕ್ತಿ ಪಡೆಯಲಿದ್ದೇವೆ ಎಂದರು.
ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಜೆಡಿಎಸ್ 3ರಿಂದ 4 ತಂಡಗಳಲ್ಲಿ ರಾಜ್ಯದ 30 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ. ನಾನು ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರವಾಸ ಆರಂಭಿಸುವ ಮೂಲಕ ಚಾಲನೆ ನೀಡಿದ್ದೇನೆ. ಉಡುಪಿ, ಶಿವಮೊಗ್ಗ, ಹಾಸನ ಮುಂತಾದ ಜಿಲ್ಲೆಗಳಲ್ಲಿ ಪ್ರಥಮ ಹಂತದಲ್ಲಿ ಪ್ರವಾಸ ಮಾಡಲಿದ್ದೇನೆ. ಎಚ್.ಡಿ. ಕುಮಾರ ಸ್ವಾಮಿ ನೇತೃತ್ವದಲ್ಲಿ ಇನ್ನೊಂದು ತಂಡ ಪ್ರವಾಸ ನಡೆಸಲಿದೆ ಎಂದರು.