ಮಂಗಳೂರು: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ಇಡೀ ಹಿಂದೂ ಸಮಾಜದಲ್ಲಿ ಸಾಮರಸ್ಯ ಮತ್ತು ಸಮಾನತೆ ಮೂಡಿಸುವಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಪರ್ಯಾಯ ದೀಕ್ಷೆಯ ಸಂದರ್ಭದಲ್ಲಿ ಶ್ರೀಕೃಷ್ಣ ಮಠಕ್ಕೆ ಮುತ್ತಿಗೆ ಹಾಕುತ್ತೇವೆ ಎಂಬ ಹೇಳಿಕೆಯನ್ನು ನೀಡಿರುವ ವಿಚಾರವಾದಿಗಳ ನಿಲುವನ್ನು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್ ಹೇಳಿದರು.ಕದ್ರಿ ವಿಹಿಂಪ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗಳು 45 ವರ್ಷಗಳ ಹಿಂದೆಯೇ ಉಪೇಕ್ಷಿತ ಬಂಧುಗಳ ಮನೆಗೆ ಭೇಟಿ ನೀಡಿ, ಅವರಿಗೆ ಮಂತ್ರ ದೀಕ್ಷೆ ನೀಡುವುದರ ಜತೆಗೆ ಮಠ ಮಂದಿರಗಳಲ್ಲಿ ಮುಕ್ತ ಅವಕಾಶ ದೊರೆಯುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ. ಪೇಜಾವರ ಶ್ರೀಗಳ ಬಗ್ಗೆ ವಿಚಾರವಾದಿಗಳಿಗೆ ಮಾತನಾಡುವ ನೈತಿಕ ಹಕ್ಕಿಲ್ಲ.
ಶ್ರೀಗಳ ಬಗ್ಗೆ ಇಡೀ ಹಿಂದೂ ಸಮಾಜಕ್ಕೆ ಅಪಾರ ಶ್ರದ್ಧೆ ಮತ್ತು ಭಕ್ತಿ ಇದೆ. ಹಾಗಾಗಿ ಪೂಜ್ಯರ ವಿರುದ್ಧ ವಿಚಾರವಾದಿಗಳು ನೀಡಿರುವ ಹೇಳಿಕೆಯನ್ನು ಹಿಂಪಡೆಯಬೇಕು ಹಾಗೂ ಪೂಜ್ಯ ಶ್ರೀಗಳ ಕ್ಷಮೆ ಯಾಚಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಆಗ್ರಹಿಸುತ್ತದೆ ಎಂದವರು ಹೇಳಿದರು.