ಮಂಗಳೂರು: ನಾಡದೋಣಿ ಮೀನುಗಾರರಿಗೆ ಸೀಮೆಎಣ್ಣೆ ವಿತರಣೆ ವಿಚಾರದಲ್ಲಿ ಶಾಶ್ವತ ಪರಿಹಾರ ಕೈಗೊಳ್ಳಲು ಕೇಂದ್ರ ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿ ಕರಾವಳಿ ಭಾಗದ ಜನಪ್ರತಿನಿಧಿಗಳ ನಿಯೋಗ ಶೀಘ್ರ ಕೇಂದ್ರ ಪೆಟ್ರೋಲಿಯಂ ಸಚಿವ ದೇವೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಮಂಗಳೂರು ತಾ. ಪಂ. ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ನಾಡದೋಣಿ ಮೀನುಗಾರರಿಗೆ ಕಾಲಕ್ಕೆ ಸರಿಯಾಗಿ ಸೀಮೆಎಣ್ಣೆ ವಿತರಣೆಯಾಗದಿರುವುದರಿಂದ ಸಮಸ್ಯೆಯಾಗುತ್ತಿದೆ.ಲೋಕಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ನೇತೃತ್ವದಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಸಂಸದರು ಮತ್ತು ಕೇಂದ್ರ ಸಚಿವರ ಮುಂದಾಳತ್ವದಲ್ಲಿ ಈ ಸಂಬಂಧ ನಿಯೋಗ ತೆರಳಿ ಮಾತುಕತೆ ನಡೆಸಲಾಗುವುದು ಎಂದು ಹೇಳಿದ್ದಾರೆ.