ಮಂಗಳೂರು: ರಾಜ್ಯದಲ್ಲಿರುವ ಅಲ್ಪಸಂಖ್ಯಾತರ ಭವನಗಳಲ್ಲಿ ಮಾಹಿತಿ ಕೇಂದ್ರವನ್ನು ಸ್ಥಾಪಿಸಿ ಈ ಮೂಲಕ ಉದ್ಯೋಗ, ಶೈಕ್ಷಣಿಕ ಸೌಲಭ್ಯ ಮತ್ತು ಇತರ ಸರ್ಕಾರಿ ಸೌಲಭ್ಯಗಳ ಬಗ್ಗೆ ಅಲ್ಪ ಸಂಖ್ಯಾತರಿಗೆ ಮಾಹಿತಿ ನೀಡುವ ಕೇಂದ್ರವನ್ನು ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಅಲ್ಪಸಂಖ್ಯಾತರ ಮತ್ತು ವಕ್ಪ್ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ. ಪಾಂಡೇಶ್ವರದ ಓಲ್ಡ್ ಕೆಂಟ್ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಜಿಲ್ಲಾ ಅಲ್ಪಸಂಖ್ಯಾತರ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಇಲಾಖೆಗಳಿಗೆ ಜನರ ಅಲೆದಾಟ ತಪ್ಪಿಸಲು ಹಾಗೂ ಇಲಾಖೆಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸಬೇಕೆಂಬ ಉದ್ದೇಶದಿಂದ ಈ ಭವನ ನಿರ್ಮಿಸಲಾಗಿದೆ.
ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಂಗಳೂರಿನ ಭವನಕ್ಕೆ ಲಿಫ್ಟ್ ಸೌಲಭ್ಯ ಸಹಿತ ಸಣ್ಣಪುಟ್ಟ ಕಾಮಗಾರಿ ಬಾಕಿಯಿದ್ದು, ಇದಕ್ಕಾಗಿ ಹೆಚ್ಚುವರಿಯಾಗಿ ೩೬ ಲಕ್ಷ್ಯ ರೂಪಾಯಿ ಬಿಡುಗಡೆಗೊಳಿಸಿದ್ದೇನೆ. ರಾಜ್ಯದ ೬ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತರ ಭವನ ಕಟ್ಟಡ ಕಾಮಗಾರಿಗಳು ಮುಗಿಯುವ ಹಂತದಲ್ಲಿದೆ ಎಂದು ಹೇಳಿದರು. ಈ ಸಂದರ್ಭ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಅಧ್ಯಕ್ಷ ಜೆ .ಆರ್ ಲೋಬೋ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಆಹಾರ ಸಚಿವ ಯು.ಟಿ.ಖಾದರ್ , ಶಾಸಕ ಮೊಯಿದ್ದೀನ್ ಬಾವಾ,ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು, ಜಿಲ್ಲಾ ಪಂಚಾಯತ್ ಸದಸ್ಯ ಶಾಹುಲ್ ಅಮೀದ್ ಮೊದಲಾದವರು ಉಪಸ್ಥಿತರಿದ್ದರು.