ಮಂಗಳೂರು: ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಂಘಟಿತರಾಗಿ ಬಲ ವರ್ಧಿಸಿಕೊಂಡು ಮುಂದಿನ ಚುನಾವಣೆಯಲ್ಲಿ ಅಧಿಕಾರ ಪಡೆಯಲು ಸಿದ್ಧತೆ ನಡೆಸಬೇಕು ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದರು.ಆದಿತ್ಯವಾರ ಸಂಜೆ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.ಕಂದಾಯ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್ ಅವರು ಸಚಿವ ಸ್ಥಾನದಿಂದ ಕೈಬಿಟ್ಟ ಬೇಸರದಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಆರ್.ವಿ. ದೇಶಪಾಂಡೆ, ಮಾಜಿ ಸಂಸದ ವಿಶ್ವನಾಥ್ ಮತ್ತು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಧಿಯಿಲ್ಲ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿಗಮ, ಮಂಡಳಿಗಳ ನೇಮಕಾತಿ ವಿಚಾರದಲ್ಲಿ ಇತ್ತೀಚೆಗೆ ಕಾಂಗ್ರೆಸ್ ನಾಯಕರು ಹೊಡೆದಾಟ ನಡೆಸಿದ್ದಾರೆ. ಇದೆಲ್ಲವೂ ಕಾಂಗ್ರೆಸ್ ಒಡೆದ ಮನೆ ಎಂಬುದನ್ನು ತೋರಿಸುತ್ತದೆ.ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರ ಬಂದಿರುವ ಶ್ರೀನಿವಾಸ ಪ್ರಸಾದ್ ಈ ಹಿಂದೆ ವಾಜಪೇಯಿ ಪ್ರಧಾನಿ ಆಗಿದ್ದಾಗ ಬಿಜೆಪಿ ಪರ ಕೆಲಸ ಮಾಡಿದ್ದರು. ಇದೀಗ ಅವರು ಮರಳಿ ಬಿಜೆಪಿಗೆ ಬರಲು ನಿರ್ಧರಿಸಿದ್ದಾರೆ. ಈ ಬಗ್ಗೆ ತಾನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜತೆ ದಿಲ್ಲಿಯಲ್ಲಿ ಮಾತುಕತೆ ನಡೆಸಿದ್ದೇನೆ. ನ. 7ರಂದು ಶ್ರೀನಿವಾಸ ಪ್ರಸಾದ್ ಸಭೆ ವ್ಯವಸ್ಥೆ ಮಾಡಿದ್ದು, ಈ ಸಭೆ ಬಳಿಕ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತ ಎಂದು ಹೇಳಿದರು.