ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಂಬಳ ಆಯೋಜಿಸಲು ಅನುಮತಿ ನಿರಾಕರಿಸಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಕರಾವಳಿ ಜಿಲ್ಲೆಯಲ್ಲಿ ಹೆಸರುವಾಸಿಯಾಗಿರುವ ಪುತ್ತೂರಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಕಳೆದ ಬಾರಿಯಂತೆ ಈ ಬಾರಿಯೂ ನಿರಾತಂಕವಾಗಿ ನಡೆಯುವುದು ಎಂದು ಕಂಬಳ ತೀರ್ಪುಗಾರ ನಿರಂಜನ ರೈ ಮಠಂತಬೆಟ್ಟು ತಿಳಿಸಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಕಂಬಳ ಆಯೋಜಿಸಲು ರಾಜ್ಯ ಹೈಕೋರ್ಟ್ ಹಸಿರುನಿಶಾನೆ ತೋರಿದ ಹಿನ್ನೆಲೆಯಲ್ಲಿ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದ್ದಾರೆ. ದ.ಕ.ಜಿಲ್ಲೆಯಲ್ಲಿ ನಿಗದಿಯಾಗಿರುವ ಕಂಬಳವನ್ನು ಕಳೆದ ಬಾರಿಯಂತೆ ಯಥಾಸ್ಥಿತಿಯಲ್ಲಿ ನಡೆಸಲು ಅವಕಾಶ ನೀಡುವಂತೆ ಆಗ್ರಹಿಸಿ ಜಿಲ್ಲಾ ಕಂಬಳ ಸಮಿತಿಯವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಆದರೆ, ಕಂಬಳ ನಡೆಸಲು ಜಿಲ್ಲಾಧಿಕಾರಿಯವರು ಅನುಮತಿ ನಿರಾಕರಿಸಿದ್ದರು.
ಜಿಲ್ಲಾಧಿಕಾರಿಗಳ ಈ ನಿಲುವನ್ನು ಪ್ರಶ್ನಿಸಿ ಮತ್ತು ಕಂಬಳ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿ ಉಪ್ಪಿನಂಗಡಿಯ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅಶೋಕ್ ಕುಮಾರ್ ರೈ ಅವರ ಪರವಾಗಿ ಹೈಕೋರ್ಟಿನಲ್ಲಿ ಹಿರಿಯ ವಕೀಲರಾದ ಬಿ.ವಿ.ಆಚಾರ್ಯ ಮತ್ತು ರಾಜಶೇಖರ್ ಇಲ್ಯಾರು ಮಂಡಿಸಿದ ವಾದವನ್ನಾಲಿಸಿದ ನ್ಯಾಯಾಧೀಶ ಎ.ಎಸ್.ಬೋಪಯ್ಯ ಅವರು ಜಿಲ್ಲಾಧಿಕಾರಿಗಳ ಆದೇಶಕ್ಕೆ ತಡೆಯಾಜ್ಞೆ ನೀಡಿ ಕಂಬಳವನ್ನು ಕಳೆದ ಬಾರಿಯಂತೆ ಯಥಾಸ್ಥಿತಿಯಲ್ಲಿ ಅವಕಾಶ ಕಲ್ಪಿಸಿ ಆದೇಶ ನೀಡಿದ್ದಾರೆ.