ನೇಮಕಾತಿಯಾದ ತಕ್ಷಣ ವರ್ಗಾವಣೆಗಾಗಿ ಪ್ರಯತ್ನ ಮಾಡುವುದನ್ನು ತಪ್ಪಿಸುವ ಸಲುವಾಗಿ ರಾಜ್ಯದ ಸಾರಿಗೆ ಸಂಸ್ಥೆಗಳಲ್ಲಿ ಪ್ರದೇಶವಾರು ಸಿಬ್ಬಂದಿ ನೇಮಕಾತಿಗೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದ ಅಧೀನದಲ್ಲಿ ಜೆ ಎನ್ ನರ್ಮ್ ಯೋಜನೆಯಡಿ ಮಂಗಳೂರಿನ ಕುಂಟಿಕಾನದಲ್ಲಿ ನಿರ್ಮಿಸಲದ ಮಂಗಳೂರು ನಗರ ಜೆಎನ್ ನರ್ಮ್ ಬಸ್ ಘಟಕವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಾರಿಗೆ ಇಲಾಖೆಯು ಕಳೆದ ವರ್ಷ ೮ ಸಾವಿರ ಹುದ್ದೆಗಳ ನೇಮಕಾತಿ ಮಾಡಿದ್ದರೆ, ಈ ಬಾರಿ ೬ ಸಾವಿರ ಹುದ್ದೆಗಳ ನೇಮಕಾತಿಗೆ ಕ್ರಮ ಜರುಗಿಸಲಾಗಿದೆ.
ಮಂಗಳೂರು ವಿಭಾಗದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದರೂ ನಿರೀಕ್ಷಿಸಿದಷ್ಟು ಅರ್ಜಿ ಸಲ್ಲಿಕೆಯಾಗುತ್ತಿಲ್ಲ. ಉತ್ತರ ಕರ್ನಾಟಕ ಭಾಗದ ಜನರು ನೇಮಕಾತಿ ಪಡೆದ ತಕ್ಷಣ ಇಲ್ಲಿನ ಹವಾಮಾನಕ್ಕೆ ಹೊಂದಿಕೊಳ್ಳಲಾಗದೆ ವರ್ಗಾವಣೆ ಪಡೆಯುವುದು ಸಾಮಾನ್ಯವಾಗಿದೆ. ಇದರಿಂದ ಈ ವಿಭಾಗದ ಹುದ್ದೆಗಳು ಭರ್ತಿಯಾಗುತ್ತಿಲ್ಲ. ಆ ಹಿನ್ನೆಲೆಯಲ್ಲಿ ಪ್ರದೇಶವಾರು ಸಿಬ್ಬಂದಿ ನೇಮಕಾತಿ ಮಾಡಲಾಗುವುದು ಎಂದು ರಾಮಲಿಂಗರೆಡ್ಡಿ ಹೇಳಿದ್ದಾರೆ.