ಮಂಗಳೂರು: ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನ ನೀರಕಟ್ಟೆ ಬಳಿ ಗ್ಯಾಸ್ ಟ್ಯಾಂಕರ್ ವೊಂದು ಉರುಳಿಬಿದ್ದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ನೀರಕಟ್ಟೆ ಬಳಿ ಈ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿತ್ತು.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿಗಳು ಹಾಗೂ ಹೆಚ್ ಪಿಸಿಎಲ್ ಅಧಿಕಾರಿಗಳು ಮತ್ತು ಪೊಲೀಸರು ಉರುಳಿಬಿದ್ದ ಗ್ಯಾಸ್ ಟ್ಯಾಂಕರ್ ನಿಂದ ಮತ್ತೊಂದು ಟ್ಯಾಂಕರ್ ಗೆ ಅನಿಲ ವರ್ಗಾಯಿಸಿದ್ದಾರೆ. ಇದರಿಂದ ಹೆಚ್ಚಿನ ಅಪಾಯ ತಪ್ಪಿದಂತಾಗಿತ್ತು. ಟ್ಯಾಂಕರ್ ಉರುಳಿ ಬಿದ್ದ ರಭಸಕ್ಕೆ ಅಲ್ಪ ಪ್ರಮಾಣದ ಅನಿಲ ಸೋರಿಕೆಯಾಗಿತ್ತು. ಕ್ಷಿಪ್ರ ಕಾರ್ಯಾಚರಣೆ ಬಳಿಕ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಅನಿಲ ಸೋರಿಕೆ ಸ್ಥಗಿತಗೊಳಿಸಲಾಗಿತ್ತು.
ಘಟನೆಯಿಂದ ಕೆಲ ಕಾಲ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಪರಿಸರದ ನಿವಾಸಿಗಳಿಗೆ ವಿದ್ಯುತ್ ಉರಿಸದಂತೆ ಮುನ್ನೆಚ್ಚರಿಕೆ ಸೂಚಿಸಲಾಗಿತ್ತು.