ಮಂಗಳೂರು: ಕೇಂದ್ರ ಸರಕಾರ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿರುವ ಹಣ ತೀರಾ ಕಡಿಮೆಯಾಗಿದ್ದು ಹೆಚ್ಚಿನ ಹಣ ಬಿಡುಗಡೆ ಮಾಡುವಂತೆ ಮರುಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ರಾಜ್ಯದ 139 ತಾಲೂಕುಗಳಲ್ಲಿ ತೀವ್ರ ಬರವಿದ್ದು 35 ಲಕ್ಷ ರೈತರು ಬಾಧಿತರಾಗಿದ್ದಾರೆ. 17,000 ಕೊ.ರೂ. ಮೌಲ್ಯದ ಬೆಳೆ ನಾಶವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರಕ್ಕೆ ಸರ್ವಪಕ್ಷಗಳನ್ನು ಒಳಗೊಂಡ ನಿಯೋಗ ತೆರಳಿ ಪ್ರಧಾನಿಯವರನ್ನು ಭೇಟಿಯಾಗಿ 4,702 ಕೋ.ರೂ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ಡಿಆರ್ಎಫ್) ಮಾನದಂಡದ ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದ್ದೆವು. ಆದರೆ ಕೇಂದ್ರ ಸರಕಾರ ಕೇವಲ 1,782 ಕೋ.ರೂ. ಬಿಡುಗಡೆ ಮಾಡಿದೆ. ಇದು ನಾವು ಕೇಳಿದ ಮೊತ್ತದ ಶೇ. 50ರಷ್ಟು ಕೂಡ ಇಲ್ಲ. ರಾಜ್ಯಕ್ಕೆ ಹೆಚ್ಚು ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರಕಾರವನ್ನು ಮತ್ತೆ ಕೋರುತ್ತೇವೆ ಎಂದರು.
ಜಾರ್ಜ್ ಮೇಲಿನ ಆರೋಪ ಮುಗಿದ ಅಧ್ಯಾಯ: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆ ಕೋರಿ ಅವರ ತಂದೆ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಿರುವ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಈ ಪ್ರಕರಣದಲ್ಲಿ ಈಗಾಗಲೇ ಸಿಐಡಿ ತನಿಖೆಯಾಗಿದ್ದು ಕೆ.ಜೆ. ಜಾರ್ಜ್ ಅವರ ಮೇಲೆ ಮಾಡಿರುವ ಆರೋಪದಲ್ಲಿ ಸತ್ಯಾಂಶ ಇಲ್ಲ ಎಂದು ವರದಿ ನೀಡಿದೆ. ಇದೊಂದು ಮುಗಿದ ಆಧ್ಯಾಯ ಎಂದರು.ಕೊಕ್ಕಡ ಬಳಿ ಎಂಡೋಸಲ್ಫಾನ್ ಪೀಡಿತ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದು ದುರದೃಷ್ಟಕರ ಸಂಗತಿ. ಸರಕಾರ ಈಗಾಗಲೇ ಎಂಡೋಸಲ್ಫಾನ್ ಪೀಡಿತರಿಗೆ ಪರಿಹಾರವಾಗಿ ಮಾಸಾಶನ ನೀಡುತ್ತಿದೆ ಎಂದರು.