ಕುಂದಾಪುರ: ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೈಂಟ್ ಮೇರಿಸ್ ಪ್ರೌಢಶಾಲೆ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಇದನ್ನು ಅರ್ಥಪೂರ್ಣವಾಗಿ ಆಚರಿಸುವ ಯೋಜನೆಯನ್ನು ರೂಪಿಸಿಕೊಳ್ಳಲಾಗಿದೆ. ವಿದ್ಯಾ ಸಂಸ್ಥೆಯ ಹಳೆ ವಿದ್ಯಾರ್ಥಿಗಳು, ಅಭಿಮಾನಿಗಳು ಈ ಮಹಾತ್ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದು ಕುಂದಾಪುರ ಸೈಂಟ್ ಮೇರಿಸ್ ವಿದ್ಯಾ ಸಂಸ್ಥೆಯ ಸಂಚಾಲಕರು, ಕುಂದಾಪುರ ವಲಯದ ಪ್ರಧಾನ ಧರ್ಮಗುರುಗಳಾದ .ವಂ.ಫಾ.ಅನಿಲ್ ಡಿ.ಸೋಜಾ ತಿಳಿಸಿದರು.
ಅವರು ಭಾನುವಾರ ಕುಂದಾಪುರದ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ನಡೆದ ಶಾಲಾ ಸುವರ್ಣ ಮಹೋತ್ಸವ ಸಮಾರಂಭದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ವಿದ್ಯಾಸಂಸ್ಥೆಯಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ಇಂದು ಸಮಾಜದ ಉನ್ನತ ಸ್ಥಾನದಲ್ಲಿದ್ದು, ಈ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಅವರೆಲ್ಲರು ಒಟ್ಟಿಗೆ ಸೇರಿ ಈ ಕಾರ್ಯಕ್ರಮವನ್ನು ಸಂಘಟಿಸಿ ವಿದ್ಯಾಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದರು. ಸುವರ್ಣ ಮಹೋತ್ಸವದ ಸಿದ್ದತೆಯ ಬಗ್ಗೆ ಶಾಲಾ ಹಳೆ ವಿದ್ಯಾರ್ಥಿಗಳಾದ ವಿವಿಯಾನ್ ಕ್ರಾಸ್ತಾ, ಪ್ರವೀಣ್ ಕುಮಾರ್, ರಾಜೇಶ್ ಕಾವೇರಿ, ಬರ್ನಾಡ್ ಡಿ’ಕೋಸ್ತಾ ಮೊದಲಾದವರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಫಾ.ಪ್ರವೀಣ್ ಅಮೃತ್ ಮಾರ್ಟಿಸ್ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಪ್ರೀತಿ ಪಾಯಸ್, ಸ್ಮಿತಾ ಡಿಸೋಜಾ, ಅಸುಂತಾ ಸಹಕರಿಸಿದರು.
ಶಿಕ್ಷಕ ಭಾಸ್ಕರ ಗಾಣಿಗ ಸ್ವಾಗತಿಸಿದರು. ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಚೇತನಾ ಪ್ರಾಸ್ತಾವನೆಗೈದರು. ಹಿರಿಯ ಶಿಕ್ಷಕ ಸ್ಟ್ಯಾನ್ಲಿ ದಿನಮಣಿ ಕಾರ್ಯಕ್ರಮದ ರೂಪರೇಷೆಯನ್ನು ಪ್ರಸ್ತುತ ಪಡಿಸಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.