ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ನಿರ್ವಹಿಸಲು ಅಧಿಕಾರಿಗಳು ಸರ್ವ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಜನರ ಬೇಡಿಕೆಗಳಿಗೆ ತುರ್ತಾಗಿ ಸ್ಪಂದಿಸಿ ಪೂರಕ ವ್ಯವಸ್ಥೆ ಮಾಡಬೇಕು ಎಂದು ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಸೂಚಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರಿಗೆ ಅನುದಾನದ ಕೊರತೆ ಇಲ್ಲ. ತಾಲೂಕು ಮಟ್ಟದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳ ಭಾಗವಹಿಸುವಿಕೆಯೊಂದಿಗೆ ಸಭೆ ನಡೆಸಬೇಕು ಎಂದು ಹೇಳಿದರು. ಸಭೆಯಲ್ಲಿ ಮಾತನಾಡಿದ ದ.ಕ.ಜಿಲ್ಲಾಧಿಕಾರಿ ಡಾ. ಕೆ.ಜಿ ಜಗದೀಶ್ ಅವರು, ಟಾಸ್ಕ್ಪೋರ್ಸ್ ಕಾರ್ಯಕ್ರಮದಡಿ ಶಾಶ್ವತ ಕಾಮಗಾರಿಗಳಿಗೆ ಸಂಬಂಧಿಸಿ ಗ್ರಾಮೀಣ ಪ್ರದೇಶಗಳಿಗೆ ೧೦ ಕೋ. ರೂ. ಹಾಗೂ ನಗರಗಳಿಗೆ ೭ ಕೋ. ರೂ. ಸೇರಿದಂತೆ ಒಟ್ಟು ೧೭ ಕೋಟಿ ರೂ. ಬಿಡುಗಡೆಯಾಗಿದೆ.
ಬರಪೀಡಿತ ಎಂದು ಘೋಷಿಸಲಾಗಿರುವ ಮಂಗಳೂರು ಮತ್ತು ಬಂಟ್ವಾಳ ತಾಲೂಕುಗಳಿಗೆ ತಲಾ ೪೦ ಲಕ್ಷ ರೂ. ಹಾಗೂ ಇತರ ತಾಲೂಕುಗಳಿಗೆ ತಲಾ ೨೦ ಲಕ್ಷ ರೂ. ಬಿಡುಗಡೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿ ಶಾಶ್ವತ ಕಾಮಗಾರಿಗಳಿಗೆ ೩೩ ಕೋ. ರೂ., ಕೆರೆಗಳ ಪುನಶ್ಚೇತನಕ್ಕೆ ೧೫ ಕೋ.ರೂ. ಮೊತ್ತದ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಗಳೂರು ತಾಲೂಕಿನ ೧೨ ಗ್ರಾಮಗಳಿಗೆ ಟ್ಯಾಂಕರ್ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ವಿವರಿಸಿದರು.