ಮಂಗಳೂರು: ಮಂಗಳೂರಿನಲ್ಲಿ ನಡೆದಿರುವ ಪೊಲೀಸ್ ದೌರ್ಜನ್ಯ ಆರೋಪಗಳ ಬಗ್ಗೆ ಸತ್ಯಾಂಶ ತಿಳಿದುಕೊಳ್ಳಲು ಗೃಹ ಸಚಿವ ಡಾ.ಪರಮೇಶ್ವರ ತಕ್ಷಣ ಅಲ್ಲಿಗೆ ಭೇಟಿ ನೀಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಪೊಲೀಸ್ ದೌರ್ಜನ್ಯದಿಂದ ಅಹ್ಮದ್ ಖುರೇಷಿ ಎಂಬ ಯುವಕ ತೀವ್ರ ಅನಾರೋಗ್ಯಕ್ಕೊಳಕ್ಕಾಗಿ, ಎರಡೂ ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದಾನೆ ಎಂದು ಕೇಳಿ ಆಘಾತವಾಯಿತು.
ದಕ್ಷಿಣ ಕನ್ನಡ, ಉಡುಪಿ,ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಇಲಾಖೆ ಸಂಪೂರ್ಣವಾಗಿ ಬಿಜೆಪಿ ಹಿಡಿತದಲ್ಲಿದೆ. ಸರ್ಕಾರ ಕಾಂಗ್ರೆಸ್ ಇದ್ದರೂ ಅಲ್ಲಿನ ಪೊಲೀಸರ ನಿಯಂತ್ರಣ ಸರ್ಕಾರದ ಕೈಯಲ್ಲಿ ಇಲ್ಲ.
ಆದ್ದರಿಂದಲೆ ಇಂತಹ ಘಟನೆಗಳು ನಡೆಯುತ್ತಿದೆ. ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಇದು ಕೆಟ್ಟ ಸಂದೇಶ ರವಾನಿಸುತ್ತದೆ. ಹೀಗಾಗಿ ಗೃಹಸಚಿವರು ಶೀಘ್ರವೇ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.