ಮಂಗಳೂರು: ಅಹ್ಮದ್ ಖುರೇಶಿ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎಂಬ ವಿಚಾರದ ಬಗ್ಗೆ ತನಿಖೆ ನಡೆಸಿ ಸಂಪೂರ್ಣ ವರದಿ ಪಡೆದುಕೊಳ್ಳುವುದಾಗಿ ಗೃಹಸಚಿವರು ಈಗಾಗಲೇ ತಿಳಿಸಿದ್ದಾರೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ತಿಳಿಸಿದರು.ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತಂತೆ ನಾನು ಗೃಹಸಚಿವರಲ್ಲಿ ಮಾತನಾಡಿದ್ದೇನೆ.
ಪ್ರಕರಣದ ಬಗ್ಗೆ ತನಿಖೆಗೆ ಅಧಿಕಾರಿಯೋರ್ವರನ್ನು ನೇಮಕ ಮಾಡಿ ಪೂರ್ಣ ವರದಿ ಪಡೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ತಪ್ಪಿತಸ್ಥರು ಯಾರೇ ಇರಲಿ ಕಾನೂನು ಅದರದ್ದೇ ಆದ ಕ್ರಮ ಕೈಗೊಳ್ಳುತ್ತದೆ ಎಂದರು.ಮಾನವೀಯ ನೆಲೆಯಲ್ಲಿ ನಾನು ಈಗಾಗಲೇ ಸ್ಪಂದಿಸಿದ್ದೇನೆ. ಖುರೇಶಿ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯ ವೈದ್ಯರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದ್ದು ಗೃಹಸಚಿವರಿಗೆ ಇದನ್ನು ತಿಳಿಸುತ್ತೇನೆ. ಇದೇ ರೀತಿಯಾಗಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಎಎಸ್ಐ ಐತಪ್ಪ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ ಎಂದವರು ಹೇಳಿದರು.