ಮಂಗಳೂರು: ದೇಶದಲ್ಲಿ ನಡೆಯುತ್ತಿದ್ದ ಉಗ್ರ ಚಟುವಟಿಕೆಗೆ ಮಂಗಳೂರಿನಲ್ಲಿ ಬಾಂಬ್ ತಯಾರಿಸಿ ಪೂರೈಕೆ ಮಾಡುತ್ತಿದ್ದರು ಎಂಬ ಆರೋಪದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಮೂವರು ಉಗ್ರರನ್ನು ಧಾರವಾಡದ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ.
2008ರಲ್ಲಿ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬುಧವಾರ ಸೈಯದ್ ನೌಶದ್, ಮಹಮ್ಮದ್ ಬಾವಾ ಅಬೂಬಕ್ಕರ್, ಫಕೀರ್ ಅಹ್ಮದ್ ಎನ್ನುವ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.ಈ ಹಿನ್ನೆಲೆಯಲ್ಲಿ ಅಪರಾಧಿಗಳನ್ನು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕರೆತರಲಾಗಿತ್ತು.
ಕಾರಣಾಂತರಗಳಿಂದ ಗುರುವಾರ ರಾತ್ರಿ ಬಂಧಿತ ಉಗ್ರ ಚಟುವಟಿಕೆ ಆರೋಪಿಗಳನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ಧಾರವಾಡ ಸೆಂಟ್ರಲ್ ಜೈಲಿಗೆ ರವಾನಿಸಲಾಗಿದೆ ಎಂದು ಜೈಲು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.