ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ. ಮುಂದಿನ 3 ತಿಂಗಳ ಒಳಗೆ ರಾಷ್ಟ್ರೀಯ ಸಮಿತಿಯಿಂದ ಬೂತ್ ಮಟ್ಟದ ವರೆಗೆ ಕಾಂಗ್ರೆಸ್ ಪಕ್ಷದ ಪುನರ್ ಸಂಘಟನೆ ನಡೆಯಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಯಿಲಿ ತಿಳಿಸಿದರು.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟನೆಯ ರೋಡ್ ಮ್ಯಾಪ್ ಸಿದ್ಧಗೊಳ್ಳುತ್ತಿದೆ. ಸೋಲಿನ ಮೇಲೆ ಸೋಲುಂಡವರ ಬದಲಾವಣೆ ಅನಿವಾರ್ಯ. ರಾಜ್ಯದಲ್ಲೂ ಅಗತ್ಯ ಇರುವ ಕಡೆ ಬದಲಾವಣೆಯಾಗಲಿದೆ ಎಂದರು. ಜನರ ವಿಶ್ವಾಸ ಗಳಿಸಬೇಕಾದರೆ ಯುವಕರನ್ನು ಸೇರಿಸಿಕೊಂಡು ಜನಪರ ಚಟುವಟಿಕೆ ನಡೆಸಬೇಕು.
ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಬಂದ ಬಳಿಕ ಅವರು ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಸಹಜವಾಗಿಯೇ ಅವರು ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಜವಾಬ್ದಾರಿ ಹೊಂದಿರುತ್ತಾರೆ. ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರಕಾರ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷ ಈ ಅವಧಿಗಿಂತ ಹೆಚ್ಚಿನ ಸ್ಥಾನ ಗೆಲ್ಲುವ ಎಂಬ ವಿಶ್ವಾಸವಿದೆ ಎಂದರು.