ಮಂಗಳೂರು: ಅಡುಗೆ ಅನಿಲ ಸಂಪರ್ಕ ಹೊಂದಿರದ ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ವಿತರಣೆಯನ್ನು ರಾಜ್ಯ ಸರ್ಕಾರ ಅನಿಲ ಭಾಗ್ಯ ಯೋಜನೆ ಮೂಲಕ ಜಾರಿಗೊಳಿಸಲಿದ್ದು, ಈ ಸಂಬಂಧ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮೇ ತಿಂಗಳಿನಿಂದ ಪ್ರಾರಂಭಗೊಳ್ಳಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈಜ ಫಲಾನುಭವಿಗಳಿಗೆ ಮಾತ್ರ ಯೋಜನಾ ಸೌಲಭ್ಯ ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ಗ್ಯಾಸ್ ಏಜೆನ್ಸಿಗಳಿಂದ ಅಡುಗೆ ಅನಿಲ ಹೊಂದಿದವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಪರಿಶೀಲನೆ ನಡೆಸಲಾಗುತ್ತದೆ. ಕೇಂದ್ರ ಸರ್ಕಾರದ ಉಜ್ವಲ್ ಯೋಜನೆ ಫಲಾನುಭವ ಪಡೆಯಲು ರಾಜ್ಯದಲ್ಲಿ ಸುಮಾರು ೨.೫೦ ಲಕ್ಷ ಮಂದಿ ಅನಿಲ ಸಂಪರ್ಕಕ್ಕಾಗಿ ಕಾಯುತ್ತಿದ್ದಾರೆ.
ಆದರೆ, ಈ ಯೋಜನೆಗೆ ರಾಜ್ಯದಿಂದಲೂ ಬೆಂಬಲ ನೀಡಿದರೂ ರಾಜ್ಯಕ್ಕೆ ಮಾತ್ರ ವಿಸ್ತರಣೆಯಾಗಿಲ್ಲ. ಉಜ್ವಲ್ ಯೋಜನೆಯಲ್ಲಿ ಬಿಟ್ಟು ಹೋದ ಅರ್ಜಿದಾರರಿಗೆ ಅನಿಲ ಭಾಗ್ಯದಲ್ಲಿ ಸೌಲಭ್ಯ ಕಲ್ಪಿಸಲಾಗುವುದು. ಪ್ರತಿ ಸಂಪರ್ಕಕ್ಕೆ ೧,೯೦೦ ರೂಪಾಯಿ ವೆಚ್ಚ ತಗುಲಲಿದ್ದು, ಇದನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.