ಮಂಗಳೂರು: ರಾಜ್ಯದಲ್ಲಿ ಪ್ರಸ್ತುತ ವರ್ಷ ಈ ಹಿಂದೆಂದೂ ಕಾಣದ ಬರ ಪರಿಸ್ಥಿತಿ ಇದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ, ವಿದ್ಯುತ್, ಗ್ರಾಮೀಣ ಅಭಿವೃದ್ಧಿ ಮತ್ತು ಇತರ ಇಲಾಖೆಗಳ ಸಹಕಾರದಲ್ಲಿ ಉತ್ತಮ ರೀತಿಯಲ್ಲಿ ನಿಭಾಯಿಸುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಿನ ಸೌಲಭ್ಯಕ್ಕಾಗಿ ಕೊಳವೆ ಬಾವಿ ನಿರ್ಮಾಣ ಮತ್ತು ಟ್ಯಾಂಕರ್ಗಳಲ್ಲಿ ನೀರು ಪೂರೈಕೆಗೆ ಸಾಕಷ್ಟು ಅನುದಾನ , ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಕ್ರಮ, ಗೋಶಾಲೆಗಳಿಗೆ ಮೇವು ಪೂರೈಕೆ ಇತ್ಯಾದಿ ಉಪಕ್ರಮಗಳನ್ನು ಅನುಸರಿಸುವ ಮೂಲಕ ಜನ ಸಾಮಾನ್ಯರಿಗೆ ಕಷ್ಟವಾಗದಂತೆ ನೋಡಿಕೊಳ್ಳಲಾಗಿದೆ .ವಿದ್ಯುತ್ ಸಮಸ್ಯೆ ಇಲ್ಲದ ಕಾರಣ ಮಕ್ಕಳಿಗೆ ಪರೀಕ್ಷಾ ಸಿದ್ಧತೆ ಮಾಡಲು ಮತ್ತು ಬರೆಯಲು ಅನಾನುಕೂಲ ಉಂಟಾಗಿಲ್ಲ. ಉದ್ಯೋಗ ಖಾತರಿ ಯೋಜನೆಯಡಿ ಕೆಲಸದ ದಿನಗಳನ್ನು 100ರಿಂದ 150ಕ್ಕೇರಿಸಲಾಗಿದೆ. ವೇತನವನ್ನು ಹೆಚ್ಚಳ ಮಾಡಲಾಗಿದೆ ಹಾಗೂ ಕೆಲಸ ಮಾಡಿದವರಿಗೆ 15 ದಿನಗಳೊಳಗೆ ವೇತನ ಪಾವತಿಗೆ ಹಣ ಬಿಡುಗಡೆಯಾಗುವಂತೆ ನೋಡಿಕೊಳ್ಳಲಾಗಿದೆ ಎಂದು ವಿವರಿಸಿದರು.