ಮಂಗಳೂರು: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎ. ಅಬ್ದುಲ್ ಜಲೀಲ್ ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಹೆಸರನ್ನು ಅನಾವಶ್ಯಕವಾಗಿ ಸಿಲುಕಿಸಲಾಗಿದೆ. ಈ ಕೊಲೆ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಭೂಗತ ಪಾತಕಿ ವಿಕ್ಕಿ ಶೆಟ್ಟಿ ತಿಳಿಸಿದ್ದಾರೆ.
ಈ ಮೂಲಕ ಪೊಲೀಸರ ಹೇಳಿಕೆಗೆ ಡಾನ್ ವಿಕ್ಕಿ ಶೆಟ್ಟಿ ಉಲ್ಟಾ ಹೊಡೆದಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ದೂರವಾಣಿ ಕರೆ ಮಾಡಿ ಈ ವಿಚಾರವನ್ನು ತಿಳಿಸಿದ್ದು, ಈ ಪ್ರಕರಣದಲ್ಲಿ ತನ್ನ ಯಾವುದೇ ಪಾತ್ರವಿಲ್ಲ ಮತ್ತು ನನ್ನನ್ನು ಸೇರಿಸಿರುವುದರ ಕಾರಣವೇನೆಂದು ತಿಳಿದಿಲ್ಲ. 2015ರಲ್ಲಿ ಉಪಾಧ್ಯಕ್ಷ ಹುದ್ದೆಯ ಆಯ್ಕೆ ಪ್ರಕ್ರಿಯೆ ಸಂದರ್ಭ ಎ. ಅಬ್ದುಲ್ ಜಲೀಲ್ ಕರೋಪಾಡಿಯವರು ಉಪಾಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು. ಪಕ್ಷದ ಬೇರೆ ಯಾವ ಕಾರ್ಯಕರ್ತರು ನಾಮಪತ್ರ ಸಲ್ಲಿಸಬಾರದೆಂದು ಸಚಿವ ಬಿ. ರಮಾನಾಥ ರೈಯವರು ಸ್ಪಷ್ಟ ಸೂಚನೆ ನೀಡಿದ್ದಾರೆನ್ನಲಾಗಿದೆ. ಅಂದ ಮೇಲೆ ನನ್ನ ಚಿಕ್ಕಪ್ಪನ ಪುತ್ರ ದಿನೇಶ್ ಶೆಟ್ಟಿ ಪಟ್ಲಾ ಅವರು ಉಪಾಧ್ಯಕ್ಷ ಹುದ್ದೆಗೆ ಹೇಗೆ ಆಕಾಂಕ್ಷಿಯಾಗುತ್ತಾರೆ? ಎಂದು ಅವರು ವಿಕ್ಕಿ ಶೆಟ್ಟಿ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.